ADVERTISEMENT

ಪೌರತ್ವ ತಿದ್ದುಪಡಿ ಕಾಯ್ದೆ ಸಂಘರ್ಷ: ಶಾಹೀನ್ ಬಾಗ್‌ನಲ್ಲಿ ಬಿಗಿ ಭದ್ರತೆ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2020, 6:48 IST
Last Updated 1 ಮಾರ್ಚ್ 2020, 6:48 IST
ಸಿಎಎ ವಿರೋಧಿಸಿ ಶಾಹೀನ್‌ ಬಾಗ್‌ನಲ್ಲಿ ನಡೆದ ಪ್ರತಿಭಟನೆಯ ದೃಶ್ಯ
ಸಿಎಎ ವಿರೋಧಿಸಿ ಶಾಹೀನ್‌ ಬಾಗ್‌ನಲ್ಲಿ ನಡೆದ ಪ್ರತಿಭಟನೆಯ ದೃಶ್ಯ   

ನವದೆಹಲಿ: ಆಗ್ನೇಯ ದೆಹಲಿಯ ಶಾಹೀನ್ ಬಾಗ್ ಪ್ರದೇಶದಲ್ಲಿ ಮುಂಜಾಗ್ರತಾ ಕ್ರಮವಾಗಿ ಭಾರೀ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಮಾರ್ಚ್ 1ರಂದು ಶಾಹೀನ್ ಬಾಗ್ ರಸ್ತೆಯನ್ನು ತೆರವುಗೊಳಿಸುವುದಾಗಿ ಹಿಂದೂ ಸೇನಾ ಸಂಘಟನೆಯು ಕರೆ ನೀಡಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಶನಿವಾರ ಪೊಲೀಸರು ಮಧ್ಯಪ್ರವೇಶಿಸಿದ ನಂತರ ಶಾಹೀನ್ ಬಾಗ್‌ನಲ್ಲಿ ಸಿಎಎ ವಿರೋಧಿ ಆಂದೋಲನದ ವಿರುದ್ಧ ಹಿಂದೂ ಸೇನಾ ತನ್ನ ಉದ್ದೇಶಿತ ಪ್ರತಿಭಟನೆಯನ್ನು ರದ್ದುಗೊಳಿಸಿದೆ.

‘ಮುನ್ನೆಚ್ಚರಿಕೆ ಕ್ರಮವಾಗಿ ಶಾಹಿನ್‌ ಬಾಗ್‌ನಲ್ಲಿ ಭಾರೀ ಪ್ರಮಾಣದ ಪೊಲೀಸ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ಕಾನೂನು, ಸುವ್ಯವಸ್ಥೆ ಕಾಪಾಡುವುದು ಮತ್ತು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯುವುದು ನಮ್ಮ ಉದ್ದೇಶ‘ ಎಂದು ಜಂಟಿ ಆಯುಕ್ತ ಡಿ. ಸಿ. ಶ್ರೀವಾಸ್ತವ ತಿಳಿಸಿದ್ದಾರೆ.

ADVERTISEMENT

ಕಳೆದ ವಾರ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಗಳನ್ನು ತಡೆಯಲು ವಿಫಲವಾದ ಕಾರಣ ದೆಹಲಿ ಪೊಲೀಸರು ವ್ಯಾಪಕ ಟೀಕೆಗೆ ಒಳಗಾಗಿದ್ದಾರೆ. ಆ ಕಾರಣ ಭಾನುವಾರ ಶಾಹಿನ್‌ ಬಾಗ್‌ನಲ್ಲಿ ಯಾವುದೇವ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯಲ್ಲಿ ಇಲ್ಲಿಯವರೆಗೆ 42 ಜನರು ಬಲಿಯಾಗಿದ್ದು, ನೂರಾರು ಜನ ಗಾಯಗೊಂಡಿದ್ದಾರೆ.

ಸಾವಿರಾರು ಮಹಿಳೆಯರು ಎರಡು ತಿಂಗಳಿಗೂ ಹೆಚ್ಚು ಕಾಲ ಪೌರತ್ವ ತಿದ್ದುಪಡಿ ಕಾನೂನಿನ ವಿರುದ್ಧ ಶಾಹಿನ್‌ ಬಾಗ್ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.