ಮುಂಬೈ: ‘ವಿರೋಧ ಪಕ್ಷದ ನಾಯಕರಾಗಿ ದೇವೇಂದ್ರ ಫಡಣವೀಸ್ ಅವರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ‘ ಎಂದು ಶಿವಸೇನಾ ಮೆಚ್ಚುಗೆ ವ್ಯಕ್ತಪಡಿಸಿದೆ.
‘ಕೋವಿಡ್–19 ನಿಯಂತ್ರಿಸಲು ಕೈಗೊಂಡ ಕ್ರಮಗಳ ಬಗ್ಗೆಯೂ ಫಡಣವೀಸ್ ತೃಪ್ತಿ ವ್ಯಕ್ತಪಡಿಸಿದ್ದಾರೆ. ಇದು ಸರ್ಕಾರ ಮತ್ತು ಕೊರೊನಾ ವೈರಸ್ ರೋಗಿಗಳ ಆತ್ಮಸ್ಥೈರ್ಯವನ್ನು ಹೆಚ್ಚಿಸಿದೆ’ ಎಂದು ಹೇಳಿದೆ.
‘ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ ರೀತಿಯಲ್ಲೇ ಫಡಣವೀಸ್ ಅವರು ಈಗ ವಿರೋಧ ಪಕ್ಷದ ನಾಯಕರಾಗಿ ಕ್ರಿಯಾಶೀಲರಾಗಿದ್ದಾರೆ. ಒಂದು ವೇಳೆ ಕೊರೊನಾ ಸೋಂಕು ದೃಢಪಟ್ಟರೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಬೇಕು ಎಂದು ತಮ್ಮ ಆಪ್ತ ಬಳಗಕ್ಕೆ ಫಡಣವೀಸ್ ತಿಳಿಸಿದ್ದಾರೆ. ಫಡಣವೀಸ್ ಅವರ ಈ ನಿಲುವು ಪ್ರಶಂಸನೀಯ’ ಎಂದು ಶಿವಸೇನಾದ ಮುಖವಾಣಿ ‘ಸಾಮ್ನಾ’ ಸಂಪಾದಕೀಯದಲ್ಲಿ ಬರೆಯಲಾಗಿದೆ.
’ಸರ್ಕಾರಿ ಆಸ್ಪತ್ರೆಗೆ ದಾಖಲಾಗುವ ಕುರಿತ ಹೇಳಿಕೆಯನ್ನು ನಾಟಕೀಯ ಎಂದು ಹೇಳಲಾಗದು. ಸರ್ಕಾರದ ಆರೋಗ್ಯ ವ್ಯವಸ್ಥೆ ಸುರಕ್ಷಿತವಾಗಿದೆ ಎನ್ನುವ ವಿಶ್ವಾಸ ಫಡಣವೀಸ್ ಅವರಿಗಿದೆ. ಹೀಗಾಗಿ, ಅವರು ಈ ಹೇಳಿಕೆ ನೀಡಿದ್ದಾರೆ’ ಎಂದು ಶಿವಸೇನಾ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.