ನವದೆಹಲಿ: ಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಶಿವಸೇನಾ ಬಣವನ್ನು ‘ನೈಜ ರಾಜಕೀಯ ಪಕ್ಷ’ ಎಂದು ಘೋಷಿಸಿದ್ದ ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್ ರಾಹುಲ್ ನಾರ್ವೇಕರ್ ಅವರ ಆದೇಶವನ್ನು ಪ್ರಶ್ನಿಸಿ ಉದ್ಧವ್ ಠಾಕ್ರೆ ಬಣ ಸಲ್ಲಿಸಿರುವ ಅರ್ಜಿಯನ್ನು ಮಾರ್ಚ್ 7ರಂದು ವಿಚಾರಣೆಗಾಗಿ ಪಟ್ಟಿ ಮಾಡುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.
ಠಾಕ್ರೆ ಬಣದ ಅರ್ಜಿ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನೇತೃತ್ವದ ಪೀಠದ ಮುಂದೆ ಮಾರ್ಚ್ 1 ರಂದು (ಶುಕ್ರವಾರ) ವಿಚಾರಣೆಗಾಗಿ ಪಟ್ಟಿ ಮಾಡಬೇಕಿತ್ತು. ಆದರೆ ಅದು ಪಟ್ಟಿಯಲ್ಲಿ ಇಲ್ಲ ಎಂದು ಠಾಕ್ರೆ ಬಣದ ಪರ ವಕೀಲ ಕಪಿಲ್ ಸಿಬಲ್ ಅವರು ನ್ಯಾಯಪೀಠದ ಗಮನಕ್ಕೆ ತಂದರು.
ಈ ಕುರಿತ ಅರ್ಜಿಯನ್ನು ಮಾರ್ಚ್ 7ರಂದು ಪಟ್ಟಿ ಮಾಡುವಂತೆ ಸಿಬಲ್ ಅವರು ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನು ಒಳಗೊಂಡ ಪೀಠಕ್ಕೆ ಮನವಿ ಮಾಡಿದರು.
‘ಈ ಅರ್ಜಿಯನ್ನು ಇದೇ 7ರಂದು (ಗುರುವಾರ) ವಿಚಾರಣೆಗೆ ಪಟ್ಟಿ ಮಾಡುತ್ತೇವೆ’ ಎಂದು ಮುಖ್ಯ ನ್ಯಾಯಮೂರ್ತಿ ತಿಳಿಸಿದರು. ಮಾರ್ಚ್ 1ರಂದು ಪಟ್ಟಿ ಮಾಡಬೇಕಿದ್ದ ಹಲವು ವಿಷಯಗಳನ್ನು ಪಟ್ಟಿ ಮಾಡಲು ಆಗಿಲ್ಲ ಎಂದು ಪೀಠ ತಿಳಿಸಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.