ಮುಂಬೈ: 50–50 ಅನುಪಾತದಲ್ಲಿ ಅಧಿಕಾರ ಹಂಚಿಕೆ ಹಾಗೂ ಸಮಾನ ಅವಧಿಯ ಮುಖ್ಯಮಂತ್ರಿ ಹುದ್ದೆ ಬಗ್ಗೆ ಒಪ್ಪಂದ ಏರ್ಪಟ್ಟಿತ್ತು ಎಂಬ ಶಿವಸೇನಾ ಆರೋಪಗಳಿಗೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ತಿರುಗೇಟು ನೀಡಿದ್ದಾರೆ.
‘ಬಿಜೆಪಿ–ಶಿವಸೇನಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ದೇವೇಂದ್ರ ಫಡಣವೀಸ್ ಅವರೇ ಮುಖ್ಯಮಂತ್ರಿ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ನಾನು ಸಾರ್ವಜನಿಕ ರ್ಯಾಲಿಗಳಲ್ಲಿ ಎಷ್ಟೋ ಬಾರಿ ಹೇಳಿದ್ದೇವೆ. ಇದಕ್ಕೆ ಯಾರೂ ಆಕ್ಷೇಪ ವ್ಯಕ್ತಪಡಿಸಿರಲಿಲ್ಲ. ಈಗ ಹೊಸ ಬೇಡಿಕೆ ಮುಂದಿಟ್ಟರೆ ಒಪ್ಪುವುದಾದರೂ ಹೇಗೆ’ ಎಂದು ಪ್ರಶ್ನಿಸಿದ್ದಾರೆ.
ಬಹುಮತ ಇರುವ ಪಕ್ಷ ಅಥವಾ ಮೈತ್ರಿಕೂಟಗಳು ರಾಜ್ಯಪಾಲರನ್ನು ಸಂಪರ್ಕಿಸಬಹುದು ಎಂದು ಶಾ ಹೇಳಿದ್ದಾರೆ. ಶಿವಸೇನಾ– ಕಾಂಗ್ರೆಸ್–ಎಸ್ಸಿಪಿ ಸೇರಿ ಸರ್ಕಾರ ರಚಿಸುವ ಯತ್ನಗಳ ಹಿನ್ನೆಲೆಯಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
ಸರ್ಕಾರ ರಚನೆಗೆ ರಾಜ್ಯಪಾಲರು ಅವಕಾಶ ನೀಡಲಿಲ್ಲ ಎಂಬುದಾಗಿ ಕಪಿಲ್ ಸಿಬಲ್ ಅವರಂತಹ ನುರಿತ ವಕೀಲರೇ ಹೇಳುತ್ತಿರುವುದು ಬಾಲಿಶ ಎಂದು ಶಾ ಹೇಳಿದರು. ಯಾವ ಪಕ್ಷಕ್ಕೂ ಸರ್ಕಾರ ರಚಿಸಲು ಸಾಧ್ಯವಾಗಿಲ್ಲ. ಹಾಗಾಗಿ ರಾಜ್ಯಪಾಲರು ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿದ್ದಾರೆ ಎಂದು ಸಮರ್ಥಿಸಿಕೊಂಡರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.