ಬಂಧನ
ರಾಂಚಿ: ಜಾರ್ಖಂಡ್ನ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಭ್ರಷ್ಟಾಚಾರ ನಿಗ್ರಹ ದಳವು (ಎಸಿಬಿ) ಹಿರಿಯ ಐಎಎಸ್ ಅಧಿಕಾರಿ ವಿನಯ್ ಕುಮಾರ್ ಚೌಬೆಯನ್ನು ಮಂಗಳವಾರ ಬಂಧಿಸಿದೆ.
ಒಂದು ತಾಸಿಗೂ ಅಧಿಕ ಕಾಲ ವಿಚಾರಣೆಗೆ ಒಳಪಡಿಸಿದ ಬಳಿಕ ಅವರನ್ನು ಬಂಧಿಸಲಾಯಿತು. ನಂತರ, ಎಸಿಬಿಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಯೋಗೇಶ್ ಕುಮಾರ್ ಮುಂದೆ ಹಾಜರುಪಡಿಸಲಾಯಿತು.
1999ನೇ ಬ್ಯಾಚಿನ ಐಎಎಸ್ ಅಧಿಕಾರಿಯಾಗಿರುವ ಚೌಬೆ ಅವರು, ಹಲವು ಮಹತ್ವದ ಹುದ್ದೆಗಳ ಜವಾಬ್ದಾರಿ ನಿರ್ವಹಿಸಿದ್ದು, ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು. ಪ್ರಸ್ತುತ, ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.
ವಿನಯ್ ಕುಮಾರ್ ಚೌಬೆ ಈ ಹಿಂದೆ ಜಾರ್ಖಂಡ್ನ ಅಬಕಾರಿ ಇಲಾಖೆಯ ಕಾರ್ಯದರ್ಶಿಯಾಗಿದ್ದ ವೇಳೆ ಅಬಕಾರಿ ನೀತಿಯಲ್ಲಿ ಅಕ್ರಮ ನಡೆಸಿದ್ದು ಬೆಳಕಿಗೆ ಬಂದ ಬಳಿಕ ಎಸಿಬಿ ತನಿಖೆ ಆರಂಭಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಚೌಬೆ ವಿರುದ್ಧ ಎಫ್ಐಆರ್ ದಾಖಲಿಸಲು ರಾಜ್ಯ ಸರ್ಕಾರ ಎಸಿಬಿಗೆ ಅನುಮತಿ ನೀಡಿತ್ತು.
ಇದರ ಬೆನ್ನಲ್ಲೇ, ಮಂಗಳವಾರ ಬೆಳಿಗ್ಗೆ ಚೌಬೆ ಅವರ ನಿವಾಸಕ್ಕೆ ಬಂದ ಎಸಿಬಿ ತಂಡ, ವಿಚಾರಣೆಗಾಗಿ ಕೇಂದ್ರ ಕಚೇರಿಗೆ ಕರೆದೊಯ್ದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಂಟಿ ಆಯುಕ್ತ ಗಜೇಂದ್ರ ಸಿಂಗ್ ಅವರನ್ನು ಎಸಿಬಿ ವಿಚಾರಣೆಗೊಳಪಡಿಸಿತ್ತು.
ಹಗರಣಕ್ಕೆ ಸಂಬಂಧಿಸಿದಂತೆ, ಚೌಬೆ ಹಾಗೂ ಸಿಂಗ್ ಅವರಿಗೆ ಸೇರಿದ ಮನೆಗಳ ಮೇಲೆ ಕಳೆದ ವರ್ಷದ ಅಕ್ಟೋಬರ್ನಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.