ಬಂಧನ ( ಸಾಂಕೇತಿಕ ಚಿತ್ರ)
ಠಾಣೆ: ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದ್ದು, ಏಳು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಠಾಣೆ ಜಿಲ್ಲೆಯ ಡೊಂಬಿವಲಿಯ ಮಾಶಾಲ್ ಚೌಕ್ನಲ್ಲಿ ಈ ಘಟನೆ ನಡೆದಿದೆ. ಅಂಬೇಡ್ಕರ್ ಜಯಂತಿ ಆಚರಿಸಲು ಜನ ಸೇರಿದ್ದರು. ಈ ವೇಳೆ ಒಂದು ಗುಂಪು ಮೊದಲು ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಲು ಬಯಸಿತ್ತು. ಆದರೆ, ಇನ್ನೊಂದು ಗುಂಪು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿತು. ಇದರಿಂದಾಗಿ ಎರಡು ಗುಂಪುಗಳ ನಡುವೆ ವಾಗ್ವಾದ ಉಂಟಾಗಿದ್ದು, ಘರ್ಷಣೆಗೆ ತಿರುಗಿದೆ ಎಂದು ಅವರು ಹೇಳಿದ್ದಾರೆ.
ಘರ್ಷಣೆಯಲ್ಲಿ ಕೋಲುಗಳಿಂದ ಹೊಡೆದಾಟ ನಡೆಸಲಾಗಿದ್ದು, ಕಲ್ಲು ತೂರಾಟ ನಡೆಸಲಾಗಿದೆ. ಘಟನೆಯಲ್ಲಿ ಕೆಲವು ವ್ಯಕ್ತಿಗಳಿಗೆ ಗಾಯಗಳಾಗಿದ್ದು, ವಾಹನಗಳಿಗೆ ಹಾನಿಯಾಗಿದೆ. ಘಟನೆ ಸಂಬಂಧ ಏಳು ಮಂದಿಯನ್ನು ಬಂಧಿಸಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಘಟನೆ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.