ADVERTISEMENT

ಹಿಮಾಚಲ ಪ್ರದೇಶದಲ್ಲಿ ಮಳೆ: ಕಾಂಗ್ರಾದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆ

ಪಿಟಿಐ
Published 14 ಜುಲೈ 2021, 12:10 IST
Last Updated 14 ಜುಲೈ 2021, 12:10 IST
ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತ
ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತ   

ಧರ್ಮಶಾಲಾ: ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಬೋಹ್ ಕಣಿವೆಯಲ್ಲಿ ಭಾರಿ ಮಳೆಯ ಪರಿಣಾಮ ಉಂಟಾದ ಭೂಕುಸಿತದಲ್ಲಿ ಆರು ಮೃತದೇಹಗಳನ್ನು ಹೊರತೆಗೆಯಲಾಗಿದೆ.

ಇದರೊಂದಿಗೆ ಕಾಂಗ್ರಾ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ಬುಧವಾರ ಮಾಹಿತಿ ನೀಡಿದ್ದಾರೆ.

ಈ ದುರ್ಘಟನೆಯಲ್ಲಿ ಪಂಜಾಬಿ ಗಾಯಕ ಮನ್ಮೀತ್ ಸಿಂಗ್ ಮೃತಪಟ್ಟಿದ್ದಾರೆ. ಅಮೃತಸರ ಮೂಲದವರಾದ ಅವರು ಸ್ನೇಹಿತರ ಜೊತೆಗೆ ಕರೇರಿ ಸರೋವರಕ್ಕೆ ಹೋಗಿದ್ದರು. ಅವರ ಮೃತದೇಹವನ್ನು ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಬೋಹ್ ಕಣಿವೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಆರು ಮಂದಿ ಸಾವಿಗೀಡಾಗಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ ಎಂದು ಕಾಂಗ್ರಾ ಜಿಲ್ಲಾಧಿಕಾರಿ ನಿಪುಣ್ ಜಿಂದಾಲ್ ತಿಳಿಸಿದ್ದಾರೆ.

ಮಂಗಳವಾರ ಬೋಹ್ ಕಣಿವೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಜೈ ರಾಮ್ ಠಾಕೂರ್, ಭೂಕುಸಿತದಲ್ಲಿ ಮನೆಕಳೆದುಕೊಂಡವರಿಗೆ ರಾಜ್ಯ ಸರ್ಕಾರವು ಹೊಸ ಮನೆಯನ್ನು ಕಟ್ಟಿಸಿಕೊಡುವ ಭರವಸೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.