ನವದೆಹಲಿ: ದೆಹಲಿಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಲೆ.ಗವರ್ನರ್ ಅನಿಲ್ ಬೈಜಾಲ್, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಇತರ ಅಧಿಕಾರಿಗಳ ಜತೆ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಿದರು.
ದೆಹಲಿಯಲ್ಲಿ 39 ಸಾವಿರ ಪ್ರಕರಣಗಳು ವರದಿಯಾಗಿದ್ದು ಸಾವಿನ ಸಂಖ್ಯೆ 1200ಕ್ಕೆ ಏರಿಕೆ ಆಗಿದೆ.
ದೆಹಲಿಯಲ್ಲಿ ಮುಂದಿನ ಎರಡು ದಿನಗಳಲ್ಲಿ ಕೊರೊನಾ ಸೋಂಕು ಪರೀಕ್ಷೆಗಳನ್ನು ದ್ವಿಗುಣಗೊಳಿಸಲಾಗುವುದು. ಆರು ದಿನಗಳ ಬಳಿಕ ಮೂರು ಪಟ್ಟು ಹೆಚ್ಚಿಸಲಾಗುವುದು ಎಂದು ಸಚಿವ ಅಮಿತ್ ಶಾ ಹೇಳಿದ್ದಾರೆ.
ಸಭೆಯ ಬಳಿಕ ಮಾತನಾಡಿದ ಅವರು, ದೆಹಲಿಯ ಕಂಟೈನ್ಮೆಂಟ್ ವಲಯಗಳಲ್ಲಿ ಪ್ರತಿ ಮತಗಟ್ಟೆಗಳಲ್ಲಿ ಸದ್ಯದಲ್ಲೇ ಕೋವಿಡ್–19 ಪರೀಕ್ಷೆಗಳನ್ನು ಆರಂಭಿಸಲಾಗುವುದು ಅಲ್ಲದೆ ಹಾಟ್ಸ್ಪಾಟ್ ಪ್ರದೇಶಗಳಲ್ಲಿ ಮನೆ– ಮನೆಗೆ ತೆರಳಿ ಆರೋಗ್ಯ ಸಮೀಕ್ಷೆಯನ್ನೂ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಕೋವಿಡ್ ರೋಗಿಗಳಿಗೆ ಹಾಸಿಗೆಗಳ ಕೊರತೆ ಇರುವ ಕಾರಣ ಕೇಂದ್ರ ಸರ್ಕಾರ 500 ರೈಲ್ವೆ ಬೋಗಿಗಳನ್ನು ಒದಗಿಸುವುದು ಎಂದೂ ಹೇಳಿದ್ದಾರೆ.
ಕೇಜ್ರಿವಾಲ್ ಹೇಳಿಕೆ: ಕೊರೊನಾ ಸೋಂಕಿನ ಪಿಡುಗನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಒಗ್ಗೂಡಿ ಎದುರಿಸಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರೂ ಸಭೆಯಲ್ಲಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.