ಶ್ರೀನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಜಮ್ಮು ಮತ್ತು ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯ ಖೀರ್ ಭವಾನಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗೃಹ ಸಚಿವರು ಸೋಮವಾರ ಮುಂಜಾನೆ ಮಧ್ಯ ಕಾಶ್ಮೀರ ಜಿಲ್ಲೆಯ ತುಲ್ಲಮುಲ್ಲಾ ಪ್ರದೇಶದಲ್ಲಿ ಚಿನಾರ್ ಮರಗಳ ನಡುವೆ ಇರುವ ದೇವಾಲಯ ಸಂಕೀರ್ಣಕ್ಕೆ ಭೇಟಿ ನೀಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾಂಪ್ರದಾಯಿಕ ಕಾಶ್ಮೀರಿ ದಿರಿಸು ಧರಿಸಿದ್ದ ಅಮಿತ್ ಶಾ, ಮಾತಾ ರಜ್ಞಾ ದೇವಿಯ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಅವರೊಂದಿಗೆ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಇದ್ದರು.
ಮೂರು ದಿನಗಳ ಜಮ್ಮು ಮತ್ತು ಕಾಶ್ಮೀರದ ಪ್ರವಾಸಕ್ಕಾಗಿ ಶನಿವಾರ ಇಲ್ಲಿಗೆ ಆಗಮಿಸಿದ ಸಚಿವರು, ಕಳೆದ ಜೂನ್ನಲ್ಲಿ ಉಗ್ರರಿಂದ ಹತ್ಯೆಯಾದ ಪೊಲೀಸ್ ಅಧಿಕಾರಿ ಪರ್ವಾಜ್ ಅಹ್ಮದ್ ನಿವಾಸಕ್ಕೆ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ ಹಾಗೂ ರಾಜಭವನದಲ್ಲಿ ಕಣಿವೆ ರಾಜ್ಯದಲ್ಲಿನ ಭದ್ರತೆ ಕುರಿತು ಪರಿಶೀಲನಾ ಸಭೆ ನಡೆಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.