
ಪುಣೆ: ಎನ್ಸಿಪಿ (ಎಸ್ಪಿ) ಅಧ್ಯಕ್ಷ ಶರದ್ ಪವಾರ್ (85) ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದ್ದು ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ವೈದ್ಯರು ಬುಧವಾರ ತಿಳಿಸಿದ್ದಾರೆ.
ಎದೆ ಭಾಗದಲ್ಲಿ ಸೋಂಕು ಕಾಣಿಸಿಕೊಂಡಿರುವ ಕಾರಣ ಅವರನ್ನು ಸೋಮವಾರ ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಉಸಿರಾಟದ ಸಮಸ್ಯೆ ಮತ್ತು ನಿರಂತರ ಕೆಮ್ಮಿನಿಂದ ಬಳಲುತ್ತಿದ್ದ ಪವಾರ್ ಅವರನ್ನು ಬಾರಾಮತಿ ಪಟ್ಟಣದಲ್ಲಿನ ಅವರ ನಿವಾಸದಿಂದ ಪುಣೆ ಆಸ್ಪತ್ರೆಗೆ ಕರೆತರಲಾಗಿತ್ತು ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.
ಆಸ್ಪತ್ರೆಯಲ್ಲಿ ವಿವಿಧ ವೈದ್ಯಕೀಯ ಪರೀಕ್ಷೆಗಳನ್ನು ಮಾಡಲಾಗಿದೆ. ಪವಾರ್ ಎದೆ ಭಾಗದಲ್ಲಿ ಸೋಂಕು ಇರುವುದು ಸಿ.ಟಿ ಸ್ಕ್ಯಾನ್ನಲ್ಲಿ ಪತ್ತೆಯಾಗಿದೆ. ಅವರ ಹೃದಯ ಬಡಿತ ಮತ್ತು ಆಮ್ಲಜನಕದ ಮಟ್ಟಗಳು ಸ್ಥಿರವಾಗಿವೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಇತ್ತೀಚಿನ ಪ್ರವಾಸ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ನಿರಂತರವಾಗಿ ಭಾಗವಹಿಸಿದ್ದರಿಂದ ಉಂಟಾದ ದೈಹಿಕ ಒತ್ತಡ ಹಾಗೂ ದಣಿವು ಈ ಸ್ಥಿತಿಗೆ ಕಾರಣವಾಗಿರಬಹುದು ಎಂದು ವೈದ್ಯರು ಹೇಳಿದ್ದಾರೆ.
ಪ್ರಸ್ತುತ ಸ್ಥಿತಿಯನ್ನು ಗಮನಿಸಿ ಮುಂದಿನ ಎರಡು ದಿನಗಳಲ್ಲಿ ಅವರನ್ನು ಬಿಡುಗಡೆ ಮಾಡುವ ಯೋಜನೆ ಇದೆ, ಇದು ಅವರ ಚೇತರಿಕೆಯನ್ನು ಅವಲಂಬಿಸಿದೆ ಎಂದು ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.