ನವದೆಹಲಿ:ದೇಶದ್ರೋಹ ಆರೋಪದಡಿ ತನ್ನ ವಿರುದ್ಧ ವಿವಿಧೆಡೆ ದಾಖಲಾಗಿರುವ ಎಫ್ಐಆರ್ಗಳ ಬದಲು, ಒಂದೇ ಎಫ್ಐಆರ್ ದಾಖಲಿಸಬೇಕು ಎಂದು ಕೋರಿ, ಪೌರತ್ವ (ತಿದ್ದುಪಡಿ) ಕಾಯ್ದೆ(ಸಿಎಎ) ವಿರೋಧಿ ಹೋರಾಟಗಾರಶರ್ಜೀಲ್ ಇಮಾಮ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಪ್ರಕರಣದಲ್ಲಿ ಮಧ್ಯಂತರ ಆದೇಶ ಹೊರಡಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ತಿಳಿಸಿದೆ.
ಈ ಹಿಂದಿನ (ಮೇ 26) ವಿಚಾರಣೆ ಸಂದರ್ಭದಲ್ಲಿ ಇಮಾಮ್ ಅರ್ಜಿ ಪರಿಗಣಿಸಿದ್ದ ಸುಪ್ರೀಂ ಕೋರ್ಟ್,ಎಫ್ಐಆರ್ ವಿಚಾರದಲ್ಲಿ ಐದು ರಾಜ್ಯಗಳಿಂದ ಪ್ರತಿಕ್ರಿಯೆ ಕೇಳಿತ್ತು.ಇಮಾಮ್ ಅರ್ಜಿಗೆ ಪ್ರತಿಯಾಗಿ ದೆಹಲಿ ಹಾಗೂ ಉತ್ತರ ಪ್ರದೇಶ ಸರ್ಕಾರಗಳು ಅಫಿಡವಿಟ್ ಸಲ್ಲಿಸಿದ್ದು, ಅಸ್ಸಾಂ, ಮಣಿಪುರ ಮತ್ತು ಅರುಣಾಚಲ ಪ್ರದೇಶ ಸರ್ಕಾರಗಳು ಇನ್ನೂ ಪ್ರತಿಕ್ರಿಯೆ ನೀಡಿಲ್ಲ.
‘ಐದು ರಾಜ್ಯಗಳ ಪ್ರತಿಕ್ರಿಯೆಯನ್ನು ನೋಡದೆ ಮಧ್ಯಂತರ ಆದೇಶ ನೀಡಲು ಸಾಧ್ಯವಿಲ್ಲ’ ಎಂದು ನ್ಯಾಯಮೂರ್ತಿ ಅಶೋಕ್ ಭೂಷಣ್ ಹಾಗೂ ವಿ.ರಾಮಸುಬ್ರಹ್ಮಣಿಯನ್ ಅವರಿದ್ದ ಪೀಠವು ಸ್ಪಷ್ಟಪಡಿಸಿತು.
ಎರಡು ವಾರ ಕಾಲಾವಕಾಶ: ವಿಡಿಯೊ ಕಾನ್ಫರೆನ್ಸ್ ಮುಖಾಂತರ ನಡೆದ ವಿಚಾರಣೆ ಸಂದರ್ಭದಲ್ಲಿ ಅಸ್ಸಾಂ ಪರವಾಗಿ ವಾದಿಸಿದ ವಕೀಲರು, ಪ್ರತಿಕ್ರಿಯೆ ನೀಡಲು ಕಾಲಾವಕಾಶ ಕೋರಿದರು. ಇದನ್ನು ಪರಿಗಣಿಸಿದ ಪೀಠವು, ಅಸ್ಸಾಂ, ಮಣಿಪುರ ಹಾಗೂ ಅರುಣಾಚಲ ಪ್ರದೇಶ ಸರ್ಕಾರಗಳಿಗೆ ಎರಡು ವಾರಗಳ ಕಾಲಾವಕಾಶ ನೀಡಿ, ವಿಚಾರಣೆಯನ್ನು ಮೂರು ವಾರ ಮುಂದೂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.