ADVERTISEMENT

ಪ್ರಜ್ಞಾ ಸಿಂಗ್ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ: ಬಿಜೆಪಿ

ಏಜೆನ್ಸೀಸ್
Published 30 ಮೇ 2020, 8:55 IST
Last Updated 30 ಮೇ 2020, 8:55 IST
ಸಂಸದೆ ಪ್ರಜ್ಞಾ ಸಿಂಗ್
ಸಂಸದೆ ಪ್ರಜ್ಞಾ ಸಿಂಗ್    

ಬೋಪಾಲ್: ಇಲ್ಲಿನ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ಕ್ಯಾನ್ಸರ್ ಮತ್ತು ಕಣ್ಣಿನ ಸಮಸ್ಯೆಗೆ ಸಂಬಂಧಿಸಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬಿಜೆಪಿ ವಕ್ತಾರರು ಸ್ಪಷ್ಟಪಡಿಸಿದ್ದಾರೆ.

ಸಂಸದೆ ನಾಪತ್ತೆಯಾಗಿದ್ದಾರೆ ಎಂದು ಶುಕ್ರವಾರ ಮಧ್ಯಪ್ರದೇಶದ ರಾಜಧಾನಿಯ ಹಲವೆಡೆ ಭಿತ್ತಿಪತ್ರಗಳನ್ನು ಅಂಟಿಸಲಾಗಿತ್ತು. ಹೀಗಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಕೊರೊನಾ ವೈರಸ್ ಸಮಸ್ಯೆ ಉಲ್ಬಣಿಸಿದರೂ ಸಂಸದೆ ನಾಪತ್ತೆಯಾಗಿದ್ದಾರೆ ಎಂದು ಪೋಸ್ಟರ್‌ಗಳಲ್ಲಿ ಉಲ್ಲೇಖಿಸಲಾಗಿತ್ತು. ಆದಾಗ್ಯೂ, ನಗರದ ಭೈರಾಗಡ ಚಿಚಿಲಿ ಪ್ರದೇಶದಲ್ಲಿ ಸಹಕಾರ ಭಾರತಿ ಸಂಸ್ಥೆಯವರು ಆರಂಭಿಸಿರುವ ಸಂಚಾರಿ ಆಸ್ಪತ್ರೆಗೆ ಠಾಕೂರ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ.

ಈ ವಿಚಾರವನ್ನು ಸಂಸ್ಥೆಯ ಉಮಾಕಾಂತ ದೀಕ್ಷಿತ್ ಎಂಬುವವರು ಬಹಿರಂಗಪಡಿಸಿದ್ದಾರೆ. ಜತೆಗೆ, ಸಂಸದೆ ನಾಪತ್ತೆಯಾಗಿಲ್ಲ, ಅನಾರೋಗ್ಯದಿಂದಾಗಿ ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಸಂಸದೆ ದೂರವಾಣಿ ಮೂಲಕ ಸತತವಾಗಿ ಸಂಪರ್ಕದಲ್ಲಿದ್ದಾರೆ. ವಲಸೆ ಕಾರ್ಮಿಕರಿಗೆ, ವಿದ್ಯಾರ್ಥಿಗಳಿಗೆ ಮತ್ತು ಲಾಕ್ ನನ್ನಿಂದ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುತ್ತಿದ್ದಾರೆ ಎಂದು ದೀಕ್ಷಿತ್ ತಿಳಿಸಿದ್ದಾರೆ.

ADVERTISEMENT

ಸಂಸದೆ ನಾಪತ್ತೆಯಾಗಿದ್ದಾರೆ ಎಂದು ಪೋಸ್ಟರ್ ಹಾಕಿರುವುದನ್ನು ಭೋಪಾಲ್ ದಕ್ಷಿಣ ಕ್ಷೇತ್ರದ ಶಾಸಕ ಮತ್ತು ಮಾಜಿ ಸಚಿವ ಪಿ.ಸಿ. ಶರ್ಮಾ ಬೆಂಬಲಿಸಿದ್ದಾರೆ. ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಸಂಸದೆ ಎಲ್ಲಿದ್ದಾರೆ ಎಂದು ಕೇಳುವ ಹಕ್ಕು ಜನರಿಗೆ ಇದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಪ್ರಜ್ಞಾ ಠಾಕೂರ್ ಎದುರು 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನುಭವಿಸಿರುವ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ನಗರದಲ್ಲೇ ಇದ್ದುಕೊಂಡು ಜನರಿಗೆ ನೆರವಾಗುತ್ತಿದ್ದಾರೆ ಎಂದು ಶರ್ಮಾ ಹೇಳಿದ್ದಾರೆ.

ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮಧ್ಯಪ್ರದೇಶ ಘಟಕದ ವಕ್ತಾರ ರಾಹುಲ್ ಕೊಥಾರಿ, ಕ್ಯಾನ್ಸರ್ ಮತ್ತು ಕಣ್ಣಿನ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಠಾಕೂರ್ ಅವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.