ನವದೆಹಲಿ : ಶನಿವಾರ ಸಂಜೆ ನಿಧನರಾದ ಕಾಂಗ್ರೆಸ್ ನಾಯಕಿ, ದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರ ಅಂತ್ಯ ಸಂಸ್ಕಾರ ಭಾನುವಾರ ನಡೆಯಿತು. ಭಾರಿ ಮಳೆಯ ನಡುವೆಯೂ ಕಾಂಗ್ರೆಸ್ ಕಾರ್ಯಕರ್ತರು, ಶೀಲಾ ಅವರ ಅಭಿಮಾನಿಗಳು ಮತ್ತು ಬಂಧುಗಳು ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡರು.
ಇಲ್ಲಿನ ನಿಗಮಬೋಧ ಘಾಟ್ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಶೀಲಾ ಅವರ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್ನ ಹಿರಿಯ ನಾಯಕರು, ಕೇಂದ್ರದ ಗೃಹಸಚಿವ ಅಮಿತ್ ಶಾ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ದೆಹಲಿ ಗೃಹಸಚಿವ ಸತ್ಯೇಂದ್ರ ಜೈನ್ ಮತ್ತಿತರರು ಇದ್ದರು.
ಬಿಜೆಪಿಯ ಹಿರಿಯ ನಾಯಕರಾದ ಲಾಲ್ಕೃಷ್ಣ ಅಡ್ವಾಣಿ ಹಾಗೂ ಸುಷ್ಮಾ ಸ್ವರಾಜ್ ಅವರು ಬೆಳಿಗ್ಗೆ ಶೀಲಾ ಅವರ ಮನೆಗೆ ತೆರಳಿ ಅಂತಿಮ ನಮನ ಸಲ್ಲಿಸಿದರು.
ಅಂತಿಮ ಸಂಸ್ಕಾರಕ್ಕೂ ಮುನ್ನ, ಶೀಲಾ ಅವರ ಪಾರ್ಥಿವ ಶರೀರವನ್ನು ಮೆರವಣಿಗೆಯ ಮೂಲಕ ಕಾಂಗ್ರೆಸ್ ಮುಖ್ಯ ಕಚೇರಿಗೆ ಒಯ್ಯಲಾಯಿತು. ಅಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮುಖ್ಯಮಂತ್ರಿಗಳಾದ ಅಶೋಕ್ ಗೆಹ್ಲೋಟ್, ಕಮಲ್ನಾಥ್ ಮುಂತಾದವರು ಅಂತಿಮ ನಮನ ಸಲ್ಲಿಸಿದರು. ಆ ನಂತರ ಶರೀರವನ್ನು ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿಯ (ಡಿಪಿಸಿಸಿ) ಕಚೇರಿಗೆ ಒಯ್ದು ಅಲ್ಲಿಯೂ ಗೌರವ ಅರ್ಪಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.