ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನಾ–ಎನ್ಸಿಪಿ–ಕಾಂಗ್ರೆಸ್ ಮೈತ್ರಿಕೂಟದ ಹೊಸ ಸರ್ಕಾರ ರಚನೆಗೆ ಮಾತುಕತೆ ನಡೆಯುತ್ತಿರುವ ಬೆನ್ನಲ್ಲೇ ಶಿವಸೇನಾದವರೇ 5 ವರ್ಷಗಳ ಕಾಲ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ ಎಂದು ಸಂಸದ ಸಂಜಯ್ ರಾವುತ್ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಗವಾನ್ ಇಂದ್ರನ ಸಿಂಹಾಸನವನ್ನು ನೀಡುತ್ತೇವೆ ಎಂದರೂ ಕೂಡ ಶಿವಸೇನಾ ಬಿಜೆಪಿಯೊಂದಿಗೆ ಹೋಗುವುದಿಲ್ಲ. ಕಾಂಗ್ರೆಸ್ ಮತ್ತು ಎನ್ಸಿಪಿ ಜೊತೆಗಿನ ಮೂರು ಪಕ್ಷಗಳ ಮೈತ್ರಿ ಅಧಿಕಾರ ವಹಿಸಿಕೊಂಡಾಗ ತಮ್ಮ ಪಕ್ಷಕ್ಕೆ ಮಹಾರಾಷ್ಟ್ರ ಸಿಎಂ ಹುದ್ದೆ ಸಿಗಲಿದೆ ಎಂದು ರಾವುತ್ ಪುನರುಚ್ಚರಿಸಿದರು.
ಇದನ್ನೂ ಓದಿ:ಮಹಾರಾಷ್ಟ್ರ ರಾಜಕಾರಣ | ಸರ್ಕಾರ ರಚನೆ ಸನ್ನಿಹಿತ
ಬಿಜೆಪಿಯು ಸೇನಾದೊಂದಿಗೆ ಮುಖ್ಯಮಂತ್ರಿ ಹುದ್ದೆ ಹಂಚಿಕೆಗೆ ಒಪ್ಪಿಕೊಂಡಿದೆ ಎನ್ನುವ ವರದಿಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮಹಾರಾಷ್ಟ್ರದ ಜನರು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಮುಖ್ಯಮಂತ್ರಿಯಾಗಬೇಕೆಂದು ಬಯಸುತ್ತಿದ್ದಾರೆ ಎಂದರು.
ಬಿಜೆಪಿಯೇತರ ಮೂರು ಪಕ್ಷಗಳು ಶುಕ್ರವಾರವೇ ರಾಜ್ಯಪಾಲರನ್ನು ಭೇಟಿಯಾಗುತ್ತವೆಯೇ ಎಂದು ಕೇಳಿದ್ದಕ್ಕೆ ಉತ್ತರಿಸಿ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಲ್ಲಿರುವಾಗ ರಾಜ್ಯಪಾಲರನ್ನು ಏಕೆ ಭೇಟಿಯಾಗಬೇಕು ಎಂದು ಪ್ರಶ್ನಿಸಿದರು.
ರೈತರು, ನಿರುದ್ಯೋಗ, ಶಿಕ್ಷಣ ಮತ್ತು ಆರೋಗ್ಯ ವಿಚಾರಗಳಿಗೆ ಆದ್ಯತೆ ನೀಡಿ ಮೂರು ಪಕ್ಷಗಳು ಸೇರಿ ಈಗಾಗಲೇ ಸಾಮಾನ್ಯ ಕನಿಷ್ಠ ಕಾರ್ಯಕ್ರಮ(CMP)ವನ್ನು ರೂಪಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.