ADVERTISEMENT

‘ಮಹಾ’ ಸರ್ಕಾರ ರಚನೆಗೆ ಸಂಬಂಧಿಸಿದ 2 ದಾಖಲೆ ನೀಡಲು ಕೋರ್ಟ್‌ ಸೂಚನೆ: ನಾಳೆಗೆ ಆದೇಶ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2019, 7:26 IST
Last Updated 24 ನವೆಂಬರ್ 2019, 7:26 IST
   

ಮುಂಬೈ: ಮಹಾರಾಷ್ಟ್ರ ಸರ್ಕಾರ ರಚನೆಗೆ ಸಂಬಂಧಿಸಿದ ಎರಡು ಮುಖ್ಯ ದಾಖಲೆಗಳನ್ನು ಹಾಜರುಪಡಿಸಲು ಸಾಲಿಸೀಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರಿಗೆ ಸೂಚಿಸಿದ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ ನಾಳೆಗೆ ಆದೇಶ ನೀಡುವುದಾಗಿ ತಿಳಿಸಿದೆ.

ರಾಜ್ಯಪಾಲರು ಬಿಜೆಪಿಯನ್ನು ಸರ್ಕಾರ ರಚನೆ ಮಾಡುವಂತೆ ಆಹ್ವಾನಿಸಿದ ಪತ್ರ ಮತ್ತು ಸರ್ಕಾರ ರಚನೆ ಮಾಡಲು ದೇವೇಂದ್ರ ಫಡಣವೀಸ್‌ ಅವರಿಗೆ ಇರುವ ಅಗತ್ಯ ಸಂಖ್ಯೆಯ ಶಾಸಕರ ಸಹಿಯುಳ್ಳ ಪತ್ರವನ್ನು ಪೀಠದೆದುರು ಹಾಜರುಪಡಿಸುವಂತೆ ಕೋರ್ಟ್‌ ಹೇಳಿತು.

ಇದೇ ವೇಳೆ ಮಹಾರಾಷ್ಟ್ರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್‌ ನೀಡಿದೆ.

ADVERTISEMENT

ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಎನ್‌.ವಿ ರಮಣ, ಅಶೋಕ್‌ ಭೂಷಣ್‌ ಮತ್ತು ಸಂಜೀವ್‌ ಖನ್ನಾ ಅವರನ್ನು ಒಳಗೊಂಡ ತ್ರಿಸದಸ್ಯ ಪೀಠವು ಅರ್ಜಿಯನ್ನು ಕೈಗೆತ್ತಿಕೊಂಡಿತು.

ಹಿರಿಯ ವಕೀಲ ಕಪಿಲ್‌ ಸಿಬಲ್‌, ಅಭಿಷೇಕ್‌ ಮನು ಸಿಂಘ್ವಿಅವರು ಶಿವಸೇನೆ, ಎನ್‌ಸಿಪಿ, ಕಾಂಗ್ರೆಸ್‌ ಪರ ವಾದಿಸಿದರೆ, ಮಾಜಿ ಅಟಾರ್ನಿ ಜನರಲ್‌ ಮುಕುಲ್‌ ರೋಹಟಗಿ ಅವರು ಬಿಜೆಪಿ ಪರ ವಾದಿಸಿದರು.

ಸಿಂಘ್ವಿ ಮತ್ತು ಸಿಬಲ್‌ ಸರ್ಕಾರ ಬಹುಮತ ಸಾಬೀತು ಮಾಡಬೇಕು ಎಂದು ತಮ್ಮ ವಾದದಲ್ಲಿ ಪ್ರತಿಪಾದಿಸಿದರು.

ಎರಡೂ ಕಡೆಯ ವಾದಗಳನ್ನು ಆಲಿಸಿದ ಪೀಠ ಸರ್ಕಾರ ರಚನೆಗೆ ಸಂಬಂಧಿಸಿದ ದಾಖಲೆಗಳನ್ನು ಹಾಜರುಪಡಿಸುವಂತೆ ತಿಳಿಸಿತು. ಅಲ್ಲದೆ, ದಾಖಲೆಗಳ ಆಧಾರದಲ್ಲಿ ನಾಳೆ ಆದೇಶ ನೀಡುವುದಾಗಿ ತಿಳಿಸಿತು.

ಮಹಾರಾಷ್ಟ್ರದ ಚುನಾವಣೆಯಲ್ಲಿ ಬಿಜೆಪಿಯು ಶಿವಸೇನೆ ಮೈತ್ರಿಯೊಂದಿಗೆ ಏಕೈಕ ದೊಡ್ಡಪಕ್ಷವಾಗಿ ಹೊರಹೊಮ್ಮಿತ್ತಾದರೂ, ಸೇನಾದ ಅನಿರೀಕ್ಷಿತ ನಡೆಯಿಂದಾಗಿ ಸರ್ಕಾರ ರಚನೆ ಮಾಡಲು ವಿಫಲವಾಗಿತ್ತು. ನಂತರ, ಮೂರೂ ಪಕ್ಷಗಳು (ಬಿಜೆಪಿ, ಶಿವಸೇನೆ, ಎನ್‌ಸಿಪಿ) ಸರ್ಕಾರ ರಚನೆ ಮಾಡದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಲಾಗಿತ್ತು.

ಹೀಗಾಗಿ, ಸರ್ಕಾರ ರಚನೆ ಮಾಡಲು ನಮಗೆ ಸೂಕ್ತ ಕಾಲವಕಾಶ ನೀಡಿಲ್ಲ ಎಂದು ಆರೋಪಿಸಿ ಶಿವಸೇನಾ, ಎನ್‌ಸಿಪಿ ಮತ್ತು ಕಾಂಗ್ರೆಸ್‌ ಈಗಾಗಲೇ ಸುಪ್ರೀಂ ಕೋರ್ಟ್‌ ಮೊರೆ ಹೋಗಿವೆ.

ಈ ನಡುವೆಯೇ ಶನಿವಾರ (ನ.23) ಬಿಜೆಪಿಯ ದೇವೇಂದ್ರ ಫಡಣವೀಸ್‌ ಅವರು ಎನ್‌ಸಿಪಿಯ ಒಂದು ಬಣದ ಶಾಸಕರೊಂದಿಗೆ ಸರ್ಕಾರ ರಚನೆ ಮಾಡಿ ತಾವು ಮುಖ್ಯಮಂತ್ರಿಯಾಗಿದ್ದಾರೆ. ಎನ್‌ಸಿಪಿಯ ಅಜಿತ್‌ ಪವಾರ್‌ ಅವರು ಉಪ ಮುಖ್ಯಮಂತ್ರಿಯಾಗಿದ್ದಾರೆ. ಆದರೆ, ರಾಜ್ಯದಲ್ಲಿ ಹೇರಲಾಗಿದ್ದ ರಾಷ್ಟ್ರಪತಿ ಆಡಳಿತವನ್ನು ದೀಢರ್‌ ಅಂತ್ಯಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಆತುರಾತುರವಾಗಿ ದೇವೇಂದ್ರ ಫಡಣವೀಸ್‌ ಅವರಿಗೆ ಸರ್ಕಾರ ರಚನೆ ಮಾಡಲು ಅವಕಾಶ ನೀಡಿದ ರಾಜ್ಯಪಾಲರ ನಡೆಯನ್ನು ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿವೆ.

ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ನ ಅರ್ಜಿಯವಿಚಾರಣೆಯ ನಂತರದ ಬೆಳವಣಿಗೆಯುಮಹಾರಾಷ್ಟ್ರ ರಾಜಕೀಯವನ್ನು ಮತ್ತಷ್ಟೂ ಕೌತುಕಭರಿತವಾಗಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.