ಚಂದ್ರಶೇಖರ ಬಾವನಕುಳೆ
ಮುಂಬೈ: ‘ಕಾಂಗ್ರೆಸ್ನೊಂದಿಗೆ ಮೈತ್ರಿ ಮಾಡಿಕೊಳ್ಳುವುದು ಪ್ರಮಾದ ಎಂಬುದನ್ನು ಅರಿತುಕೊಂಡಿರುವ ಶಿವಸೇನಾ (ಯುಬಿಟಿ) ನಾಯಕರು ಮಹಾರಾಷ್ಟ್ರದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ’ ಎಂದು ಮಹಾರಾಷ್ಟ್ರ ಬಿಜೆಪಿ ಘಟಕದ ಅಧ್ಯಕ್ಷ ಚಂದ್ರಶೇಖರ ಬಾವನಕುಳೆ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶಿವಸೇನಾ (ಯುಬಿಟಿ) ನಾಯಕರು 2019ರಲ್ಲಿ ಬಿಜೆಪಿ ಮತ್ತು ದೇವೇಂದ್ರ ಫಡಣವೀಸ್ ಜತೆಗಿನ ಮೈತ್ರಿಯನ್ನು ಮುರಿದುಕೊಂಡು ಕಾಂಗ್ರೆಸ್ ಅನ್ನು ಆಯ್ಕೆ ಮಾಡಿಕೊಂಡಿದ್ದ ತನ್ನ ಪ್ರಮಾದವನ್ನು ಅರಿತುಕೊಂಡಿದ್ದಾರೆ. ತಡವಾಗಿಯಾದರೂ ಮಾಜಿ ಸಿಎಂ ಉದ್ಧವ್ ಠಾಕ್ರೆ ನೇತೃತ್ವದ ಪಕ್ಷಕ್ಕೆ (ಶಿವಸೇನಾ) ಕಾಂಗ್ರೆಸ್ ಸಿದ್ಧಾಂತವನ್ನು ಮುಂದೆ ಕೊಂಡೊಯ್ಯಲು ಸಾಧ್ಯವಿಲ್ಲ ಎಂಬುದು ಮನವರಿಕೆಯಾಗಿದೆ’ ಎಂದು ಹೇಳಿದ್ದಾರೆ.
‘ಒಂದು ಪಕ್ಷ ಅಥವಾ ಒಂದು ಸಿದ್ಧಾಂತದ ಮೈತ್ರಿ ಕೇಂದ್ರದ ಮಟ್ಟದಿಂದ ಪಂಚಾಯತಿ ಹಂತದವರೆಗೆ ಅಧಿಕಾರದಲ್ಲಿದ್ದರೆ ಮಾತ್ರ ಅಭಿವೃದ್ಧಿಗೆ ಮೀಸಲಿಟ್ಟ ಪ್ರತಿಯೊಂದು ಪೈಸೆಯೂ ದೆಹಲಿಯಿಂದ ತಳಮಟ್ಟದವರೆಗೆ ತಲುಪುತ್ತದೆ’ ಎಂದು ಬಾವನಕುಳೆ ತಿಳಿಸಿದ್ದಾರೆ.
ಮಹಾರಾಷ್ಟ್ರದ ‘ಮಹಾ ವಿಕಾಸ ಆಘಾಡಿ’ (ಎಂವಿಎ) ಮೈತ್ರಿಕೂಟದ ಪ್ರಮುಖ ಪಾಲುದಾರ ಪಕ್ಷವಾದ ಶಿವಸೇನಾ (ಯುಬಿಟಿ), ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಶನಿವಾರ ಪ್ರಕಟಿಸಿತ್ತು. ಪಕ್ಷದ ಈ ನಡೆಯು ಎಂವಿಎ ಒಗ್ಗಟ್ಟಿನ ಬಗ್ಗೆ ಪ್ರಶ್ನೆಗಳು ಮೂಡುವಂತೆ ಮಾಡಿದೆ.
ಪಕ್ಷದ ಸಂಘಟನೆಯನ್ನು ಗಟ್ಟಿಗೊಳಿಸುವ ಹಕ್ಕು ತಮಗೆ ಇರುತ್ತದೆ ಹಾಗೂ ಮೈತ್ರಿಕೂಟದ ಭಾಗವಾಗಿ ಸ್ಪರ್ಧಿಸಿದರೆ ಪಕ್ಷದ ಕಾರ್ಯಕರ್ತರಿಗೆ ಅವಕಾಶಗಳ ಕೊರತೆ ಎದುರಾಗುತ್ತದೆ ಎಂಬ ಕಾರಣಕ್ಕೆ ಏಕಾಂಗಿಯಾಗಿ ಸ್ಪರ್ಧಿಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಅವರು ಹೇಳಿದ್ದರು.
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿಗೆ ಬೆಂಬಲ ನೀಡುವುದಾಗಿ ಶಿವಸೇನಾ (ಯುಬಿಟಿ) ಘೋಷಿಸಿದೆ. ಈ ನಡೆಯು ಕಾಂಗ್ರೆಸ್ಸನ್ನು ಉಪೇಕ್ಷಿಸಿದಂತಿದೆ ಎಂದು ವಿಶ್ಲೇಷಿಸಲಾಗಿತ್ತು.
ರಾವುತ್ ಅವರ ಮಾತಿಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡರೊಬ್ಬರು, ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಬೇಕೇ ಎಂಬ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಹೇಳಿದ್ದಾರೆ.
ಶಿವಸೇನಾ (ಯುಬಿಟಿ) ತೀರ್ಮಾನವು ಎಂವಿಎ ಮೈತ್ರಿಕೂಟದ ಎಲ್ಲ ಪಕ್ಷಗಳ ಮೇಲೆಯೂ ಪರಿಣಾಮ ಉಂಟುಮಾಡುತ್ತದೆ ಎಂದು ಎನ್ಸಿಪಿ (ಎಸ್ಪಿ) ಹೇಳಿದೆ. ‘ಇಂಡಿಯಾ’ ಹಾಗೂ ಎಂವಿಎ ಮೈತ್ರಿಕೂಟಗಳು ರಚನೆಯಾಗಿದ್ದುದು ಕ್ರಮವಾಗಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಗಮನದಲ್ಲಿ ಇರಿಸಿಕೊಂಡು ಎಂದು ರಾವುತ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.