ನವದೆಹಲಿ: ಶಿವಮೊಗ್ಗದ ಕಲ್ಲು ಗಣಿಕಾರಿಕೆ ಕ್ವಾರಿಯಲ್ಲಿ ಸಂಭವಿಸಿರುವ ಸ್ಫೋಟ ಬಹುದೊಡ್ಡ ದುರಂತವಾಗಿದ್ದು, ಈ ಪ್ರಕರಣವನ್ನು ಆಳವಾದ ತನಿಖೆಗೆ ಒಳಪಡಿಸಬೇಕು. ಈ ಮೂಲಕ ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಪುನರಾವರ್ತನೆಯಾಗುವುದನ್ನು ತಪ್ಪಿಸಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಘಟನೆಯಲ್ಲಿ ಮೃತಪಟ್ಟವಿಗೆ ಸಂತಾಪ ಸೂಚಿಸಿದ್ದು, ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.
‘ಇಂಥ ಘಟನೆಗಳು ಬಗ್ಗೆ ಆಳವಾದ ತನಿಖೆ ನಡೆಯಬೇಕು. ಇದರಿಂದ ಭವಿಷ್ಯದಲ್ಲಿ ಇಂಥ ಘಟನೆಗಳು ಪುನರಾವರ್ತನೆಯಾಗುವುದನ್ನು ತಪ್ಪಿಸಬಹುದು‘ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಗುರುವಾರ ರಾತ್ರಿ 10.30ರ ಸಮಾರಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಜಲ್ಲಿ ಕ್ರಷರ್ ಬಳಿ ಸಂಗ್ರಹಿಸಿಟ್ಟಿದ್ದ ಒಂದು ಟ್ರಕ್ ಲೋಡ್ನಷ್ಟು ಸ್ಫೋಟಕ ಸಾಮಗ್ರಿಗಳು ಸ್ಫೋಟಗೊಂಡು ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಲ್ಲು ಗಣಿಗಾರಿಕೆಗಾಗಿಯೇ ಈ ಸ್ಫೋಟಕ ಸಾಮಗ್ರಿಯನ್ನು ಸಂಗ್ರಹಿಸಿಡಲಾಗಿತ್ತು ಎಂದು ಶಂಕಿಸಲಾಗಿದೆ.
ಈ ಸ್ಫೋಟದ ತೀವ್ರತೆಯ ಪರಿಣಾಮ ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲದೇ, ಪಕ್ಕದ ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳ ಹಳ್ಳಿಗಳಲ್ಲೂ ಕಾಣಿಸಿಕೊಂಡಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.