ADVERTISEMENT

ಶ್ರೀಕೃಷ್ಣ ಜನ್ಮಭೂಮಿ ವಿವಾದ: ಮಥುರಾ ಕೋರ್ಟ್‌ಗೆ ಹೈಕೋರ್ಟ್‌ ಆದೇಶ ಪ್ರತಿ ಸಲ್ಲಿಕೆ

ಪಿಟಿಐ
Published 24 ಮೇ 2022, 12:26 IST
Last Updated 24 ಮೇ 2022, 12:26 IST
   

ಮಥುರಾ: ಶ್ರೀ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಮಸೀದಿಯ ವಿವಾದಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು 4 ತಿಂಗಳಲ್ಲಿ ಇತ್ಯರ್ಥಪಡಿಸುವಂತೆ ನಿರ್ದೇಶನ ನೀಡಿ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶದ ಪ್ರತಿಯನ್ನು ಮಥುರಾ ನ್ಯಾಯಾಲಯಕ್ಕೆ ಮಂಗಳವಾರ ಸಲ್ಲಿಸಲಾಗಿದೆ.

ತಾತ್ಕಾಲಿಕ ತಡೆಯಾಜ್ಞೆ ಅರ್ಜಿಗಳು ಸೇರಿದಂತೆ ವಿವಾದಕ್ಕೆ ಸಂಬಂಧಿಸಿದ ಎಲ್ಲಾ ಬಾಕಿ ಪ್ರಕರಣಗಳನ್ನು ಒಟ್ಟಿಗೆ ಸೇರಿಸುವ ಮೂಲಕ ನಾಲ್ಕು ತಿಂಗಳೊಳಗೆ ಇತ್ಯರ್ಥಪಡಿಸುವಂತೆ ಕೆಳ ನ್ಯಾಯಾಲಯಕ್ಕೆ ಮೇ 12 ರಂದು ಅಲಹಾಬಾದ್ ಹೈಕೋರ್ಟ್ ನಿರ್ದೇಶಿಸಿತ್ತು.

ಹೈಕೋರ್ಟ್‌ ಆದೇಶಕ್ಕೆ ಸಂಬಂಧಿಸಿದ ಪ್ರತಿಯನ್ನು ಮಥುರಾ ನ್ಯಾಯಾಲಯದ ನ್ಯಾಯಾಧೀಶರಿಗೆ ಮಂಗಳವಾರ ಸಲ್ಲಿಸಲಾಯಿತು ಎಂದು ಅರ್ಜಿದಾರರ ಪರ ವಕೀಲರೊಬ್ಬರು ತಿಳಿಸಿದ್ದಾರೆ.

ADVERTISEMENT

ಬಳಿಕ, ಹೈಕೋರ್ಟ್‌ ಆದೇಶದ ಪ್ರತಿಯನ್ನು ಜುಲೈ 1ರ ಮುಂದಿನ ವಿಚಾರಣೆ ವೇಳೆ ಸಲ್ಲಿಸುವಂತೆ ಸಿವಿಲ್ ನ್ಯಾಯಾಲಯದ ನ್ಯಾಯಾಧೀಸರು ತಿಳಿಸಿರುವುದಾಗಿ ಅರ್ಜಿದಾರ ಮನೀಶ್ ಯಾದವ್ ಪರ ವಕೀಲ ದೀಪಕ್ ಶರ್ಮಾ ಹೇಳಿದ್ದಾರೆ.

ತಾನು ಶ್ರೀಕೃಷ್ಣನ ವಂಶಸ್ಥನೆಂದು ಹೇಳಿಕೊಂಡ ಲಖನೌ ನಿವಾಸಿ ಮನೀಶ್ ಯಾದವ್, ಕತ್ರಾ ಕೇಶವ್ ದೇವ್ ದೇವಸ್ಥಾನದ 13.37 ಎಕರೆ ಆವರಣದೊಳಗಿನ ಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾದ ಮಸೀದಿಯನ್ನು ಸ್ಥಳಾಂತರಿಸಬೇಕೆಂದು ಅರ್ಜಿಯಲ್ಲಿ ಒತ್ತಾಯಿಸಿದ್ದಾರೆ.

ತಮ್ಮ ಅರ್ಜಿ ಇತ್ಯರ್ಥಪಡಿಸುವಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಮನೀಶ್ ಯಾದವ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.