ADVERTISEMENT

ಅನಾರೋಗ್ಯಕ್ಕೀಡಾಗಿರುವ ವ್ಯಕ್ತಿಗೆ ಪಿಎಂಎಲ್‌ಎ ಅಡಿ ಜಾಮೀನು: ಸುಪ್ರೀಂ ಕೋರ್ಟ್

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2024, 15:28 IST
Last Updated 14 ಅಕ್ಟೋಬರ್ 2024, 15:28 IST
<div class="paragraphs"><p>ಸುಪ್ರೀಂ ಕೋರ್ಟ್‌</p></div>

ಸುಪ್ರೀಂ ಕೋರ್ಟ್‌

   

ನವದೆಹಲಿ: ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆಯು (ಪಿಎಂಎಲ್‌ಎ) ಬಹಳ ಕಠಿಣವಾಗಿದ್ದರೂ, ಆರೋಪಿಯು ಆರೋಗ್ಯವಾಗಿ ಇಲ್ಲದಿದ್ದಾಗ ಆತನಿಗೆ ಈ ಕಾಯ್ದೆಯ ಅಡಿಯಲ್ಲಿ ಜಾಮೀನು ನೀಡಬಹುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

ಸೇವಾ ವಿಕಾಸ ಸಹಕಾರ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಅಮರ್ ಸಾಧುರಾಮ್ ಮೂಲಚಂದಾನಿ ಅವರಿಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಹಾಗೂ ಮನೋಜ್ ಮಿಶ್ರಾ ಅವರು ಇರುವ ತ್ರಿಸದಸ್ಯ ಪೀಠವು ವೈದ್ಯಕೀಯ ಕಾರಣಕ್ಕಾಗಿ ಜಾಮೀನು ಮಂಜೂರು ಮಾಡಿದೆ.

ADVERTISEMENT

ಅಮರ್ ಅವರು, ₹429 ಕೋಟಿ ಮೊತ್ತದ ಹಣದ ಅವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧನದಲ್ಲಿದ್ದಾರೆ. ಅವರನ್ನು 2023ರ ಜುಲೈ 1ರಂದು ಬಂಧಿಸಲಾಗಿತ್ತು.

ಆರೋಪಿಯ ವಿರುದ್ಧ ನಾಲ್ಕು ಎಫ್‌ಐಆರ್‌ಗಳು ಇವೆ ಎಂದು ಹಿರಿಯ ವಕೀಲ ಎ.ಎಸ್. ನಾಡಕರ್ಣಿ ಅವರು ಪೀಠದ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ನ್ಯಾಯಪೀಠವು, ‘ಪಿಎಂಎಲ್‌ಎ ಕಾಯ್ದೆಯು ಅದೆಷ್ಟೇ ಕಠಿಣವಾಗಿರಬಹುದು, ನ್ಯಾಯಮೂರ್ತಿಗಳಾದ ನಾವು ಕಾನೂನಿನ ಚೌಕಟ್ಟಿನ ಅಡಿಯಲ್ಲಿ ಕೆಲಸ ಮಾಡಬೇಕಾಗುತ್ತದೆ. ಅನಾರೋಗ್ಯಕ್ಕೆ ತುತ್ತಾಗಿರುವ ವ್ಯಕ್ತಿಗೆ ಜಾಮೀನು ನೀಡಬೇಕು ಎಂದು ಕಾನೂನು ಹೇಳುತ್ತದೆ’ ಎಂದು ತಿಳಿಸಿತು.

ಅಮರ್ ಅವರು ಒಂದು ವರ್ಷಕ್ಕೂ ಹೆಚ್ಚಿನ ಅವಧಿಯಿಂದ ಜೈಲಿನಲ್ಲಿ ಇದ್ದಾರೆ ಎಂಬುದನ್ನು ಪೀಠವು ದಾಖಲಿಸಿಕೊಂಡಿತು. 

ಅಮರ್ ಅವರು ವೈದ್ಯಕೀಯ ಕಾರಣಕ್ಕೆ ತಮಗೆ ಜಾಮೀನು ನೀಡಬೇಕು ಎಂಬ ಕೋರಿಕೆಯೊಂದಿಗೆ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್‌ ಆಗಸ್ಟ್‌ನಲ್ಲಿ ವಜಾಗೊಳಿಸಿದೆ. ಇದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.