ADVERTISEMENT

ಸಿಧು ಕ್ಷಮೆಯಾಚಿಸುವವರೆಗೂ ಅಮರಿಂದರ್ ಭೇಟಿಯಾಗುವ ಪ್ರಶ್ನೆಯಿಲ್ಲ: ಸಿಎಂ ಸಲಹೆಗಾರ

ಪಿಟಿಐ
Published 21 ಜುಲೈ 2021, 1:24 IST
Last Updated 21 ಜುಲೈ 2021, 1:24 IST
ಅಮರಿಂದರ್ ಸಿಂಗ್ ಹಾಗೂ ನವಜೋತ್ ಸಿಂಗ್ ಸಿಧು (ಸಂಗ್ರಹ ಚಿತ್ರ)
ಅಮರಿಂದರ್ ಸಿಂಗ್ ಹಾಗೂ ನವಜೋತ್ ಸಿಂಗ್ ಸಿಧು (ಸಂಗ್ರಹ ಚಿತ್ರ)   

ಚಂಡೀಗಡ: ವೈಯಕ್ತಿಕ ಅವಹೇಳನಕಾರಿ ಟ್ವೀಟ್‌ಗಳಿಗೆ ಸಂಬಂಧಿಸಿದಂತೆ ನವಜೋತ್ ಸಿಂಗ್ ಸಿಧು ಸಾರ್ವಜನಿಕವಾಗಿ ಕ್ಷಮೆಯಾಚಿಸುವವರೆಗೂ ಪಂಜಾಬ್ ಕಾಂಗ್ರೆಸ್‌ನ ನೂತನ ಅಧ್ಯಕ್ಷರನ್ನು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಭೇಟಿಯಾಗುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಮಾಧ್ಯಮ ಸಲಹೆಗಾರ ರವೀನ್ ತುಕ್ರಾಲ್ ಹೇಳಿದ್ದಾರೆ.

ಅಮರಿಂದರ್ ಸಿಂಗ್ ಅವರ ವಿರೋಧದ ನಡುವೆಯೂ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷನಾಗಿ ಸಿಧು ಅವರನ್ನು ವರಿಷ್ಠರು ಆಯ್ಕೆ ಮಾಡಿದ್ದರು.

ನೂತನವಾಗಿ ನೇಮಕಗೊಂಡ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರನ್ನು ಭೇಟಿ ಮಾಡಲು ಸಮಯ ಕೋರಿಲ್ಲ ಎಂಬುದನ್ನು ರವೀನ್ ತುಕ್ರಾಲ್ ಸ್ಪಷ್ಟಪಡಿಸಿದರು.

ಈ ಕುರಿತು ಟ್ವೀಟ್ ಮಾಡಿರುವ ರವೀನ್ ತುಕ್ರಾಲ್, 'ಸಿಎಂ ಭೇಟಿಗೆ ಸಿಧು ಸಮಯ ಕೋರಿದ್ದಾರೆ ಎಂಬ ವರದಿ ಸಂಪೂರ್ಣ ಸುಳ್ಳು. ಇದುವರೆಗೆ ಸಮಯ ನಿಗದಿಯಾಗಿಲ್ಲ. ಸಿಎಂ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ. ಸಾಮಾಜಿಕ ಮಾಧ್ಯಮಗಳಲ್ಲಿ ವೈಯಕ್ತಿಕವಾಗಿ ಅವಹೇಳನ ಮಾಡಿರುವುದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಕ್ಷಮೆಕೋರುವ ವರೆಗೂ ಸಿಧು ಅವರನ್ನು ಸಿಎಂ ಭೇಟಿ ಮಾಡುವುದಿಲ್ಲ' ಎಂದು ಹೇಳಿದ್ದಾರೆ.

ಕಳೆದ ವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹರೀಶ್ ರಾವತ್ ಭೇಟಿ ವೇಳೆಯಲ್ಲೂ ಮುಖ್ಯಮಂತ್ರಿ ಈ ವಿಚಾರವನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ ಎಂಬುದು ತಿಳಿದು ಬಂದಿದೆ. ಅಲ್ಲದೆ ಸಿಧು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಸಂದರ್ಭದಲ್ಲೂ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

ಈ ಮೊದಲು ಸಮಸ್ಯೆಗಳನ್ನು ಬಗೆಹರಿಸುವ ವರಗೊ ಸಿಧು ಜೊತೆ ಖಾಸಗಿ ಭೇಟಿಯಿಲ್ಲ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಬ್ರಹ್ಮ ಮಹೀಂದ್ರಾ ತಿಳಿಸಿದ್ದರು. ಸಿಎಂ ಅವರನ್ನು ಭೇಟಿಯಾಗಿ ಸಮಸ್ಯೆ ಬಗೆಹರಿಸುವ ವರೆಗೂ ನಾನು ಸಿಧು ಅವರನ್ನು ಭೇಟಿಯಾಗುವುದಿಲ್ಲ ಎಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.