
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ಕಾರ್ಯ ಹಲವು ಅಡಚಣೆಗಳನ್ನು ಎದುರಿಸುತ್ತಿದೆ. ಚುನಾವಣಾ ಅಧಿಕಾರಿಗಳಿಗೆ ಅಡ್ಡಿ ಉಂಟು ಮಾಡಲಾಗುತ್ತಿದೆ. ಹಿಂಸಾಚಾರ, ಬೆದರಿಕೆ ಹಾಗೂ ರಾಜಕೀಯ ಹಸ್ತಕ್ಷೇಪದಿಂದಾಗಿ ಇಡೀ ಪ್ರಕ್ರಿಯೆಗೆ ಧಕ್ಕೆ ಆಗುತ್ತಿದೆ ಎಂದು ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
‘ಕಳೆದ ವರ್ಷ ನವೆಂಬರ್ 24ರಂದು ಕೋಲ್ಕತ್ತದಲ್ಲಿ ಮುಖ್ಯ ಚುನಾವಣಾ ಅಧಿಕಾರಿ ಕಚೇರಿಗೆ ಘೇರಾವ್ ಹಾಕಲಾಗಿತ್ತು’ ಎಂದು ಆಯೋಗವು ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ವಿವರಿಸಿದೆ.
‘ಘೇರಾವ್ ವೇಳೆ, ಪ್ರತಿಭಟನಕಾರರು ಕಚೇರಿ ಪ್ರವೇಶಿಸಲು ಯತ್ನಿಸಿದರು. ಬ್ಯಾರಿಕೇಡ್ಗಳನ್ನು ಕಿತ್ತುಹಾಕಿದರಲ್ಲದೇ, ಗೇಟ್ಗೆ ಹೊರಗಿನಿಂದ ಬೀಗ ಹಾಕುವ ಮೂಲಕ ಯಾರೂ ಕಚೇರಿಯನ್ನು ಪ್ರವೇಶಿಸದಂತೆ ಹಾಗೂ ತೊರೆಯದಂತೆ ನಿರ್ಬಂಧಿಸಿದ್ದರು’ ಎಂದು ಆಯೋಗ ತಿಳಿಸಿದೆ.
‘ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡುವುದು ಬೆಂಕಿ ಜೊತೆ ಸರಸವಾಡಿದಂತೆ ಎಂದು ಶಾಸಕರೊಬ್ಬರು ಬೆದರಿಕೆ ಹಾಕಿದ್ದಾರೆ. ಕಾನೂನು ಕೈಗೆತ್ತಿಕೊಳ್ಳುವಂತೆ ಜನರಿಗೆ ಬಹಿರಂಗವಾಗಿಯೇ ಕರೆ ನೀಡಿದ್ದಾರೆ’ ಎಂದೂ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.