ADVERTISEMENT

SIR ಪ್ರಶ್ನಿಸಿ ಕೇರಳ ಸೇರಿ ಹಲವು ರಾಜ್ಯಗಳ ಅರ್ಜಿ: ECಗೆ ಸುಪ್ರೀಂ ಕೋರ್ಟ್ ನೋಟಿಸ್

ಪಿಟಿಐ
Published 21 ನವೆಂಬರ್ 2025, 9:03 IST
Last Updated 21 ನವೆಂಬರ್ 2025, 9:03 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಕೇರಳ, ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ಒಪ್ಪಿಕೊಂಡಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ಎಸ್‌.ವಿ.ಎನ್‌. ಭಟ್ಟಿ ಮತ್ತು ಜಾಯ್‌ಮಾಲ್ಯ ಬಾಗ್ಚಿ ಅವರ ಪೀಠವು ಕೆಲವು ರಾಜ್ಯಗಳಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆ ಪ್ರಶ್ನಿಸಿ ವಿವಿಧ ರಾಜಕೀಯ ಪಕ್ಷಗಳ ನಾಯಕರು ಸಲ್ಲಿಸಿರುವ ಹೊಸ ಅರ್ಜಿಗಳಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗಕ್ಕೆ (ಇ.ಸಿ) ನೋಟಿಸ್‌ ಜಾರಿ ಮಾಡಿದೆ.

ಕೇರಳದಲ್ಲಿ ಕೈಗೊಂಡಿರುವ ಎಸ್‌ಐಆರ್ ಪ್ರಕ್ರಿಯೆ ಪ್ರಶ್ನಿಸಿರುವ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ‘ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ನಿರ್ಧರಿಸಲಾಗಿದ್ದು, ಈ ವಿಷಯವನ್ನು ತುರ್ತಾಗಿ ವಿಚಾರಣೆ ನಡೆಸುವ ಅಗತ್ಯವಿದೆ’ ಎಂದು ಪೀಠಕ್ಕೆ ತಿಳಿಸಿದರು.

ADVERTISEMENT

ಕೇರಳದ ಎಸ್‌ಐಆರ್‌ ಪ್ರಕ್ರಿಯೆ ಪ್ರಶ್ನಿಸಿರುವ ಅರ್ಜಿಗಳನ್ನು ನವೆಂಬರ್ 26ರಂದು ವಿಚಾರಣೆ ನಡೆಸಲು ಪಟ್ಟಿ ಮಾಡಲಾಗುವುದು ಮತ್ತು ಇತರ ರಾಜ್ಯಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಡಿಸೆಂಬರ್ ಮೊದಲ ಅಥವಾ ಎರಡನೇ ವಾರದಲ್ಲಿ ವಿಚಾರಣೆಗೆ ತೆಗೆದುಕೊಳ್ಳ ಲಾಗುವುದು ಎಂದು ಪೀಠವು ಹೇಳಿತು.

ಖಾಸಗಿ ವ್ಯಕ್ತಿಗಳ ಬದಲು ರಾಜಕೀಯ ಪಕ್ಷಗಳು ಈಗ ಎಸ್‌ಐಆರ್‌ ಪ್ರಕ್ರಿಯೆಯನ್ನು ಪ್ರಶ್ನಿಸಲು ಮುಂದಾಗಿರು ವುದು ಒಳ್ಳೆಯ ಬೆಳವಣಿಗೆ ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದರು.

ಎಸ್‌ಐಆರ್, ಅದರಲ್ಲೂ ಮುಖ್ಯ ವಾಗಿ ಅದನ್ನು ಕಾರ್ಯಗತಗೊಳಿಸುವ ವಿಧಾನವು ದೇಶದ ಪ್ರಜಾಸತ್ತಾತ್ಮಕ ರಾಜಕೀಯಕ್ಕೆ ಅನುಕೂಲಕರವಾಗಿಲ್ಲ ಎಂಬುದು ಇಡೀ ರಾಜ್ಯದ ಅಭಿಪ್ರಾಯವಾಗಿದೆ ಎಂದು ಕೇರಳ ಸರ್ಕಾರ ತನ್ನ ಅರ್ಜಿಯಲ್ಲಿ ಹೇಳಿದೆ.

ಎಸ್‌ಐಆರ್ ಪ್ರಕ್ರಿಯೆಯನ್ನು ದೇಶದಾದ್ಯಂತ ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಈಗಾಗಲೇ ನಡೆಸುತ್ತಿದೆ.

ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್‌ ನಡೆಸುತ್ತಿರುವುದನ್ನು ಪ್ರಶ್ನಿಸಿ ಡಿಎಂಕೆ, ಸಿಪಿಎಂ, ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್‌ ಸಮಿತಿ ಮತ್ತು ತೃಣಮೂಲ ಕಾಂಗ್ರೆಸ್‌ ಪಕ್ಷಗಳು ಸಲ್ಲಿಸಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ನವೆಂಬರ್‌ 11ರಂದು ಚುನಾವಣಾ ಆಯೋಗದಿಂದ ಪ್ರತ್ಯೇಕ ಪ್ರತಿಕ್ರಿಯೆ ಕೇಳಿತ್ತು.

‘ಇ.ಸಿ ದುರ್ಬಲಕ್ಕೆ ಮಮತಾ ಪ್ರಯತ್ನ’

ಕೋಲ್ಕತ್ತ: ಎಸ್‌ಐಆರ್‌ಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಚರ್ಚೆಯ ಕಾವು ಹೆಚ್ಚಿಸಿರುವ ಬಿಜೆಪಿ ನಾಯಕ ಸುವೇಂದು ಅಧಿಕಾರಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರಿಗೆ ಪತ್ರ ಬರೆದಿದ್ದಾರೆ.

‘ಮಮತಾ ಅವರು ಚುನಾವಣಾ ಆಯೋಗವನ್ನು (ಇ.ಸಿ) ದುರ್ಬಲಗೊಳಿಸಲು ಮತ್ತು ಅಕ್ರಮ ಮತಬ್ಯಾಂಕ್ ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.

‘ಅಧಿಕಾರ ಉಳಿಸಿಕೊಳ್ಳಲು ತಾನು ಮಾಡಿಕೊಂಡಿರುವ ವ್ಯವಸ್ಥೆಗೆ ಬೆದರಿಕೆ ಯಾಗಿ ಪರಿಣಮಿಸಿದೆ ಎಂಬ ಕಾರಣದಿಂದ ಮಮತಾ ಅವರು ಎಸ್‌ಐಆರ್‌ಗೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಮತದಾರರ ಪಟ್ಟಿಯನ್ನು ಸ್ವಚ್ಛಗೊಳಿಸುವ ಅಭಿಯಾನದ ಹಳಿತಪ್ಪಿಸುವ ಹತಾಶ ಪ್ರಯತ್ನ ಇದು’ ಎಂದು ದೂರಿದ್ದಾರೆ.

‘ರಾಜ್ಯದಲ್ಲಿ ಸೂಕ್ತ ಕಾರ್ಯಯೋಜನೆ ಇಲ್ಲದೆಯೇ ಬಲವಂತವಾಗಿ ಎಸ್ಐಆರ್‌ ನಡೆಸಲಾಗುತ್ತಿದೆ. ಈ ಪ್ರಕ್ರಿಯೆಯು ಸಾರ್ವಜನಿಕರು ಮತ್ತು ಅಧಿಕಾರಿಗಳನ್ನು ಅಪಾಯಕ್ಕೆ ಒಡ್ಡುತ್ತಿದೆ’ ಎಂದು ಮಮತಾ ಗುರುವಾರ ಆರೋಪಿಸಿದ್ದರು. ಅದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.