
ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗದ ‘ಎಸ್ಐಆರ್’ನಿಂದ ಆತಂಕಗೊಂಡು ಮೃತಪಟ್ಟವರ ಕುಟುಂಬಗಳನ್ನು ಭೇಟಿಮಾಡುವ ಉದ್ದೇಶದಿಂದ ಟಿಎಂಸಿ ರಾಷ್ಟ್ರೀಯ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಪಕ್ಷದ ನಾಯಕರನ್ನು ಒಳಗೊಂಡ ತಂಡಗಳನ್ನು ರಚಿಸಿದ್ದಾರೆ ಎಂದು ಟಿಎಂಸಿ ವಕ್ತಾರರು ಶನಿವಾರ ತಿಳಿಸಿದ್ದಾರೆ.
ಈ ತಂಡಗಳು ಮೃತಪಟ್ಟವರ ಕುಟುಂಬಗಳನ್ನು ಭೇಟಿಮಾಡಿ, ಅವರಿಗೆ ಬೇಕಾದ ನೆರವನ್ನು ಒದಗಿಸುವಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.
ಎಸ್ಐಆರ್ನಿಂದ ಆತಂಕಗೊಂಡು ಆತ್ಮಹತ್ಯೆ ಮಾಡಿಕೊಂಡಿರುವವರ ಕುಟುಂಬಗಳನ್ನು ಈ ತಂಡಗಳ ಸದಸ್ಯರು ವೈಯಕ್ತಿಕವಾಗಿ ಭೇಟಿ ಮಾಡಲಿದ್ದಾರೆ. ಆ ಕುಟುಂಬಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅವರಿಗೆ ಭಾವನಾತ್ಮಕ ಮತ್ತು ನೈತಿಕ ಬೆಂಬಲ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಬಿಜೆಪಿ ಪಕ್ಷದ ರಾಜಕೀಯ ಹಿತಾಸಕ್ತಿಯ ಕಾರಣದಿಂದ ಚುನಾವಣಾ ಆಯೋಗವು ಆರಂಭಿಸಿರುವ ‘ಎಸ್ಐಆರ್’ನಿಂದ ಆತಂಕಕ್ಕೊಳಗಾಗಿ ರಾಜ್ಯದಲ್ಲಿ ಇದುವರೆಗೂ 7 ಮಂದಿ ಮೃತಪಟ್ಟಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.