ಕಿರಣ್ ರಿಜಿಜು
ನವದೆಹಲಿ: ‘ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಶೀಲನೆ (ಎಸ್ಐಆರ್) ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಸಲು ಸಾಧ್ಯವಿಲ್ಲ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಪುನರುಚ್ಛರಿಸಿದ್ದಾರೆ.
‘ಎಸ್ಐಆರ್‘ ಕುರಿತ ವಿಚಾರಣೆ ಸುಪ್ರೀಂಕೋರ್ಟ್ನಲ್ಲಿ ಬಾಕಿ ಇರುವುದರಿಂದ ಮತ್ತು ಲೋಕಸಭೆಯ ನಿಯಮಗಳ ಪ್ರಕಾರ, ನ್ಯಾಯಾಲಗಳಲ್ಲಿ ವಿಚಾರಣಾ ಹಂತದಲ್ಲಿರುವ ವಿಷಯಗಳ ಕುರಿತು ಸದನದಲ್ಲಿ ಚರ್ಚಿಸಲು ಅವಕಾಶ ಇಲ್ಲ’ ಎಂದು ಅವರು ಪ್ರತಿಪಾದಿಸಿದ್ದಾರೆ.
‘ಎಸ್ಐಆರ್’ ಕುರಿತು ಚರ್ಚೆಗೆ ಅವಕಾಶ ನೀಡಬೇಕೆಂದು ಆಗ್ರಹಿಸಿ ಬುಧವಾರವೂ ವಿರೋಧ ಪಕ್ಷಗಳು ಸದನದಲ್ಲಿ ಗದ್ದಲ ಎಬ್ಬಿಸಿದವು. ಮಧ್ಯಾಹ್ನ 2 ಗಂಟೆಗೆ ಮತ್ತೆ ಸದನ ಸೇರಿದಾಗಲೂ ವಿರೋಧ ಪಕ್ಷಗಳು ಪಟ್ಟು ಸಡಿಲಿಸದೆ ವಾಗ್ವಾದ ಮುಂದುವರಿಸಿತು.
‘ನ್ಯಾಯಾಲಯಗಳಲ್ಲಿ ತೀರ್ಪು ಬಾಕಿ ಇರುವ ಪ್ರಕರಣಗಳ ಕುರಿತು ಚರ್ಚೆಗೆ ಸಂಸತ್ತಿನ ನಿಯಮಾನುಸಾರ ಅವಕಾಶ ಇಲ್ಲ ಎಂದ ರಿಜಿಜು, ಸಾಂವಿಧಾನಿಕ ಸಂಸ್ಥೆಯಾದ ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಬಗ್ಗೆಯೂ ಸದನದಲ್ಲಿ ಚರ್ಚೆ ಸಾಧ್ಯವಿಲ್ಲ’ ಎಂದರು.
ಪ್ರಮುಖ ಕಾಯ್ದೆಗಳನ್ನು ಅಂಗೀಕರಿಸುವುದಕ್ಕೆ ಸಂಬಂಧಿಸಿದಂತೆ ನಡೆಯುವ ಚರ್ಚೆಯಲ್ಲಿ ಭಾಗವಹಿಸುವಂತೆ ಅವರು ಸದಸ್ಯರಿಗೆ ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.