
ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ನಾಯಕರು ಪ್ರತಿಭಟನೆ ನಡೆಸಿದ ಬೆನ್ನಲ್ಲೇ, ಕೇಂದ್ರ ಸರ್ಕಾರ ಇದೇ 9ರಂದು ಲೋಕಸಭೆಯಲ್ಲಿ ಚರ್ಚೆಗೆ ಅವಕಾಶ ಕಲ್ಪಿಸುವುದಾಗಿ ಹೇಳಿದೆ.
ಇದರಿಂದ ಸಂಸತ್ತಿನ ಉಭಯ ಸದನಗಳಲ್ಲಿ ನಡೆಯುತ್ತಿದ್ದ ಗದ್ದಲಕ್ಕೆ ತೆರೆ ಬಿದ್ದಂತಾಗಿದೆ.
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷಗಳ ನಾಯಕರ ಸಭೆ ಮತ್ತು ಕಲಾಪ ಸಲಹಾ ಸಮಿತಿ (ಬಿಎಸಿ) ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
‘ಸ್ಪೀಕರ್ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷಗಳ ನಾಯಕರ ಸಭೆಯಲ್ಲಿ ಇದೇ 8ರಂದು (ಸೋಮವಾರ) ಮಧ್ಯಾಹ್ನ 12 ಗಂಟೆಯಿಂದ ‘ವಂದೇ ಮಾತರಂ’ನ 150ನೇ ವಾರ್ಷಿಕೋತ್ಸವ ಕುರಿತು ಹಾಗೂ ಇದೇ 9ರಂದು ಮಧ್ಯಾಹ್ನ 12 ಗಂಟೆಯಿಂದ ಚುನಾವಣಾ ಸುಧಾರಣೆಗಳ ಕುರಿತು ಚರ್ಚೆ ನಡೆಸಲು ನಿರ್ಧರಿಸಲಾಗಿದೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
‘ಸ್ಪೀಕರ್ ನೇತೃತ್ವದಲ್ಲಿ ನಡೆದ ಸಭೆ ಯಶಸ್ವಿಯಾಗಿದ್ದು, ವಂದೇ ಮಾತರಂ ಮತ್ತು ಚುನಾವಣಾ ಸುಧಾರಣೆ ಕುರಿತ ಚರ್ಚೆಗೆ ನಾಯಕರು ಸಹಮತ ವ್ಯಕ್ತಪಡಿಸಿದ್ದಾರೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ‘ಲೋಕಸಭೆಯಲ್ಲಿ ಚರ್ಚೆಗಳು ಮುಗಿದ ಬಳಿಕ, ಅದನ್ನು ರಾಜ್ಯಸಭೆಯಲ್ಲಿ ಕೈಗೆತ್ತಿಕೊಳ್ಳಲು ಪ್ರಸ್ತಾಪಿಸುತ್ತೇವೆ’ ಎಂದು ಹೇಳಿದ್ದಾರೆ.
ಮೂಲಗಳ ಪ್ರಕಾರ, ರಾಜ್ಯಸಭೆಯಲ್ಲಿ ಇದೇ 9ರಂದು ವಂದೇ ಮಾತರಂ ಕುರಿತು ಹಾಗೂ ಇದೇ 11ರಂದು ಚುನಾವಣಾ ಸುಧಾರಣೆಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆಗಳಿವೆ.
ಇದಕ್ಕೂ ಮುನ್ನ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಹಲವು ನಾಯಕರು ಸಂಸತ್ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ, ಎಸ್ಐಆರ್ ಚರ್ಚೆಗೆ ಒತ್ತಾಯಿಸಿದರು.
ಎಸ್ಐಆರ್ ವಿರುದ್ಧದ ಪೋಸ್ಟರ್ಗಳು ಮತ್ತು ಫಲಕಗಳನ್ನು ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ‘ಎಸ್ಐಆರ್ ನಿಲ್ಲಿಸಿ–ಮತಗಳ್ಳತನ ನಿಲ್ಲಿಸಿ’ ಎಂದು ಬರೆದ ದೊಡ್ಡ ಬ್ಯಾನರ್ ಹಿಡಿದು ಪ್ರತಿಭಟಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಡಿಎಂಕೆಯ ಕನಿಮೋಳಿ, ಟಿ.ಆರ್.ಬಾಲು ಮತ್ತು ಸಿಪಿಎಂನ ಜಾನ್ ಬ್ರಿಟ್ಟಾಸ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
‘ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕಿಗಿಂತ ದೊಡ್ಡ ವಿಷಯ ಯಾವುದಿರಲು ಸಾಧ್ಯ?’ ಎಂದು ರಾಹುಲ್ ಗಾಂಧಿ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ಪ್ರಧಾನಿ ಮೋದಿ ಅವರು, ‘ಸಂಸತ್ತು ಈ ದೇಶದ ಜನರಿಗೆ ಸಂಬಂಧಿಸಿದ್ದು’ ಎಂದು ಹೇಳುತ್ತಾರೆ. ಆದರೆ, ಜನರ ಕಲ್ಯಾಣಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಚರ್ಚೆಯಿಂದ ಅವರು ವಿಮುಖರಾಗುತ್ತಾರೆ’ ಎಂದು ದೂರಿದ್ದಾರೆ.
‘ಮತದಾನ ಪ್ರತಿಯೊಬ್ಬ ನಾಗರಿಕರ ಹಕ್ಕು. ದೇಶದ ಬಡ ಮತ್ತು ದುರ್ಬಲ ಸಮುದಾಯದ ಜನರ ಹಕ್ಕನ್ನು ಕಸಿಯಲು ಎಸ್ಐಆರ್ ಅನ್ನು ಅಸ್ತ್ರವಾಗಿ ಬಳಸಲಾಗುತ್ತಿದೆ. ಈ ಮೂಲಕ ಚುನಾವಣೆಗಳನ್ನು ಏಕಪಕ್ಷೀಯವನ್ನಾಗಿ ಮಾಡಲಾಗುತ್ತಿದೆ’ ಎಂದು ಅವರು ಆರೋಪಿಸಿದರು.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ‘ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮತ್ತು ಚುನಾವಣಾ ಆಯೋಗವು ಎಸ್ಐಆರ್ ಮೂಲಕ ಒಟ್ಟಾಗಿ ‘ಮತಕಳ್ಳತನ’ದಲ್ಲಿ ತೊಡಗಿವೆ’ ಎಂದು ಆರೋಪಿಸಿದ್ದಾರೆ.
‘ಲಕ್ಷಾಂತರ ದಲಿತರು, ಹಿಂದುಳಿದವರು, ಬುಡಕಟ್ಟು ಜನರ ಮತದಾನದ ಹಕ್ಕನ್ನು ಕಸಿಯುವ ಸಂಘಟಿತ ಯತ್ನ ನಡೆಯುತ್ತಿದೆ. ಆಯೋಗವು ವಿರೋಧ ಪಕ್ಷಗಳ ಎಲ್ಲ ಪ್ರಶ್ನೆಗಳನ್ನೂ ನಿರ್ಲಕ್ಷಿಸಿದೆ. ಸರ್ಕಾರವು ಬಹಿರಂಗವಾಗಿ ಆಯೋಗವನ್ನು ಸಮರ್ಥಿಸುತ್ತಿದೆ’ ಎಂದು ‘ಎಕ್ಸ್’ನಲ್ಲಿ ಹೇಳಿದ್ದಾರೆ.
‘ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ನಾಶ ಮಾಡಿ ಸರ್ವಾಧಿಕಾರ ಸ್ಥಾಪನೆಗಾಗಿ ಈ ಪಿತೂರಿ ನಡೆಸಲಾಗುತ್ತಿದೆ. ಯಾವುದೇ ಕಾರಣಕ್ಕೂ ಅವರ ಈ ಆಕಾಂಕ್ಷೆಯನ್ನು ಸಾಕಾರವಾಗಲು ಅವಕಾಶ ನೀಡುವುದಿಲ್ಲ’ ಎಂದು ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ಎಸ್ಐಆರ್ ಕುರಿತ ಚರ್ಚೆಗೆ ಸರ್ಕಾರವು ಸಿದ್ಧವಿದೆ. ಆದರೆ ವಿಪಕ್ಷಗಳು ಚರ್ಚೆಗೆ ಕಾಲಮಿತಿ ನಿಗದಿ ಮಾಡುವಂತಿಲ್ಲಕಿರಣ್ ರಿಜಿಜು, ಸಂಸದೀಯ ವ್ಯವಹಾರಗಳ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.