ಕೋಲ್ಕತ್ತ: ಪಶ್ಚಿಮ ಬಂಗಾಳದ ಆಡಳಿತರೂಡ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಆರೋಪಿಸಿದ್ದಾರೆ.
ಭಾನುವಾರ ಬಿಜೆಪಿ ರ್ಯಾಲಿಯಲ್ಲಿ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರು ದೇಶದ 80 ಕೋಟಿ ಜನರಿಗೆ ಎಂಟು ತಿಂಗಳ ಕಾಲ ಉಚಿತವಾಗಿ ಪಡಿತರವನ್ನು ಒದಗಿಸಿದ್ದಾರೆ. ಆದರೆ, ರಾಜ್ಯ ಸರ್ಕಾರ ಪಡಿತರವನ್ನು ಲೂಟಿ ಮಾಡಿದೆ’ ಎಂದು ಆರೋಪಿಸಿದರು.
ತವರಿಗೆ ಮರಳಿರುವ ವಲಸಿಗ ಕಾರ್ಮಿಕರಿಗೆ ಅವರವರ ಊರುಗಳಲ್ಲಿ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ‘ಗರಿಬ್ ಕಲ್ಯಾಣ್ ರೋಜರ್ ಅಭಿಯಾನ್’ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಆದರೆ, ಈ ಯೋಜನೆ ಸಮಪರ್ಕವಾಗಿ ಜಾರಿಗೆ ತರುವಲ್ಲಿ ಪಶ್ಚಿಮ ಬಂಗಾಳ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದ್ದಾರೆ.
ಕಾರ್ಮಿಕರಿಗಾಗಿ ಶ್ರಮಿಕ್ ವಿಶೇಷ ರೈಲು ಸೇವೆಯನ್ನು ಆರಂಭಿಸಲಾಗಿತ್ತು. ಇದಕ್ಕೆ ಮಮತಾ ಬ್ಯಾನರ್ಜಿಯವರು ‘ಕೊರೊನಾ ಎಕ್ಸ್ಪ್ರೆಸ್’ ಎಂದು ಟೀಕಿಸಿದ್ದರು. ‘ದೇಶದ ವಿವಿಧ ಭಾಗಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರನ್ನು ವೈರಸ್ಗಳೆಂದು ಪರಿಗಣಿಸಲಾಗಿದೆಯೇ ಎಂದು ನಾನು, ಮಮತಾ ಬ್ಯಾನರ್ಜಿಯವರನ್ನು ಕೇಳಲು ಬಯಸುತ್ತೇನೆ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.