ನವದೆಹಲಿ: ಕೇಂದ್ರ ಸರ್ಕಾರವು ಜಾತಿ–ಧರ್ಮಗಳ ಆಧಾರದಲ್ಲಿ ಜನರನ್ನು ವಿಭಜಿಸಲು ಹೊರಟಿದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನವದೆಹಲಿಯಲ್ಲಿ ನಡೆದ ವಿರೋಧ ಪಕ್ಷಗಳ ಸಭೆಯಲ್ಲಿ ಮಾತನಾಡಿರುವ ಅವರು, ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದಬ್ಬಾಳಿಕೆಯ ಆಳ್ವಿಕೆ ನಡೆಸುತ್ತಿದೆ. ಜನರ ನಡುವೆ ಜಾತಿ–ಧರ್ಮಗಳ ಆಧಾರದಲ್ಲಿ ಗೆರೆ ಎಳೆದು ದ್ವೇಷ ಬಿತ್ತುವ ಕೆಲಸ ಮಾಡುತ್ತಿದೆ’ ಎಂದು ಕಿಡಿ ಕಾರಿದ್ದಾರೆ.
ಸಿಎಎ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ತೆಗೆದುಕೊಂಡ ಕ್ರಮವನ್ನು ಖಂಡಿಸಿರುವ ಸೋನಿಯಾ ಗಾಂಧಿ, ‘ಸಿಎಎ–ಎನ್ಆರ್ಸಿ ವಿರೋಧಿಸಿ ದೇಶದಾದ್ಯಂತ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರಿಗೆ ನಾಗರಿಕರು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಉತ್ತರ ಪ್ರದೇಶ ಹಾಗೂ ದೆಹಲಿಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಜೊತೆ ಪೊಲೀಸರು ನಡೆದುಕೊಂಡಿರುವ ರೀತಿ ಪಕ್ಷಪಾತ ಮತ್ತು ಕ್ರೂರತನದಿಂದ ಕೂಡಿದೆ’ ಎಂದು ಹೇಳಿದ್ದಾರೆ.
ಇದೇ ವೇಳೆ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ‘ಮೋದಿ ಮತ್ತು ಅಮಿತ್ ಶಾ ಅವರು ದೇಶದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಅವರು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವಲ್ಲಿ ನಿರತರಾಗಿದ್ದಾರೆ. ದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಅವರಿಬ್ಬರೂ ನಡೆದುಕೊಳ್ಳತ್ತಿರುವ ರೀತಿ ಅಸೂಕ್ಷ್ಮವಾಗಿದೆ’ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.