ನವದೆಹಲಿ: ಇಲ್ಲಿನ ಅಖಿಲ ಭಾರತ ಕಾಂಗ್ರೆಸ್ ಪಕ್ಷದ (ಎಐಸಿಸಿ) ಕೇಂದ್ರ ಕಚೇರಿಯಲ್ಲಿ ಸೋಮವಾರ ನಡೆದ ಪಕ್ಷದ 136ನೇ ಸಂಸ್ಥಾಪನಾ ದಿನಾಚರಣೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಗೈರಾಗಿದ್ದರು.
ಇಬ್ಬರು ಪ್ರಮುಖ ನಾಯಕರ ಅನುಪಸ್ಥಿತಿಯಲ್ಲಿ ಕಾಂಗ್ರೆಸ್ನ ಹಿರಿಯ ನಾಯಕ ಎ.ಕೆ.ಆಂಟೊನಿ ಅವರು ಪಕ್ಷದ ಧ್ವಜಾರೋಹಣ ಮಾಡಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಪಕ್ಷದ ಹಿರಿಯ ಕಾರ್ಯಕಾರಿ ಸದಸ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಪಕ್ಷದ ಸಾಂಸ್ಥಿಕ ರಚನೆ ಬದಲಾಗಬೇಕೆಂದು ಬಯಸಿದ್ದ ಪಕ್ಷದ ಹಿರಿಯ ನಾಯಕರಾದ ಗುಲಾಂ ನಬಿ ಆಝಾದ್ ಮತ್ತು ಆನಂದ ಶರ್ಮಾ ಸೇರಿದಂತೆ ಹಲವು ಪ್ರಮುಖ ನಾಯಕರು ಹಾಜರಿದ್ದರು.
ಇತ್ತೀಚೆಗೆ ಸೋನಿಯಾ ಗಾಂಧಿ ಅವರು ಸಾರ್ವಜನಿಕ ಕಾರ್ಯಕ್ರಮಗಳಿಗೆ ಹಾಜರಾಗುವುದನ್ನು ನಿಲ್ಲಿಸಿದ್ದರು. ಜತೆಗೆ, ರಾಹುಲ್ ಗಾಂಧಿ ವೈಯಕ್ತಿಕ ಕಾರ್ಯಗಳ ಮೇಲೆ ಇಟಲಿಗೆ ತೆರಳಿದ್ದಾರೆ.
ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾ, ‘ಸರ್ಕಾರ ರೈತರ ಪ್ರತಿಭಟನೆಗೆ ಸ್ಪಂದಿಸಬೇಕು. ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬೇಕು. ಈ ವಿಚಾರದಲ್ಲಿ ರಾಜಕೀಯ ಬೆರೆಸಬಾರದು. ಪ್ರತಿಭಟನೆಯನ್ನು ರಾಜಕೀಯ ಪಿತೂರಿ ಎನ್ನುವುದು ತಪ್ಪು‘ ಎಂದು ಹೇಳಿದರು. ಆದರೆ, ರಾಹುಲ್ ಗಾಂಧಿ ಅನುಪಸ್ಥಿತಿ ಕುರಿತು ಪ್ರಶ್ನೆಗಳಿಗೆ ಅವರು ಉತ್ತರಿಸಲಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.