ನವದೆಹಲಿ: ಸಶಸ್ತ್ರ ಪಡೆಗಳ ನೂತನ ನೇಮಕಾತಿ ಯೋಜನೆ ‘ಅಗ್ನಿಪಥ’ ದೂರದೃಷ್ಟಿಯಿಲ್ಲದ್ದು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಯೋಜನೆಯ ರದ್ದತಿಗಾಗಿ ಪಕ್ಷ ಹೋರಾಟ ನಡೆಸಲಿದೆ ಎಂದು ಅವರು ಹೇಳಿದ್ದಾರೆ.
ಯೋಜನೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಯುವಕರು ಶಾಂತಿ ಕಾಪಾಡಬೇಕು. ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಶಾಂತಿಯುತ ಪ್ರತಿಭಟನೆ ನಡೆಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
‘ಸರ್ಕಾರವು ಸಶಸ್ತ್ರ ಪಡೆಗಳ ನೇಮಕಾತಿಗೆ ದೂರದೃಷ್ಟಿಯಿಲ್ಲದ ನೂತನ ಯೋಜನೆ ಘೋಷಿಸಿರುವುದು ದುರದೃಷ್ಟಕರ. ಇದರಲ್ಲಿ ನಿಮ್ಮ (ಯುವಕರ) ಬೇಡಿಕೆಯನ್ನು ನಿರ್ಲಕ್ಷಿಸಲಾಗಿದೆ’ ಎಂದು ಯುವಕರನ್ನು ಉದ್ದೇಶಿಸಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಸೋನಿಯಾ ಗಾಂಧಿ ತಿಳಿಸಿದ್ದಾರೆ.
ಯೋಜನೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಯುವಕರಿಗೆ ಕಾಂಗ್ರೆಸ್ ಪಕ್ಷದ ಬೆಂಬಲ ಇದೆ. ಯುವಕರು ಮಾತ್ರವಲ್ಲದೆ, ಅನೇಕ ನಿವೃತ್ತ ಯೋಧರು, ರಕ್ಷಣಾ ತಜ್ಞರು ಯೋಜನೆಯನ್ನು ಪ್ರಶ್ನಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಕೋವಿಡೋತ್ತರ ಉಸಿರಾಟ ಸಮಸ್ಯೆಗಳಿಂದ ಬಳಲುತ್ತಿರುವ ಸೋನಿಯಾ ಅವರು ಸದ್ಯ ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.