ಮುಂಬೈ: ಆಗಸ್ಟ್ 20ರಂದು ನಡೆಯಲಿರುವ ಸೋನಿಯಾ ಗಾಂಧಿ ನೇತೃತ್ವದ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭಾಗಿಯಾಗಲಿದ್ದಾರೆ ಎಂದು ಶಿವಸೇನಾ ಮುಖಂಡ ಸಂಜಯ್ ರಾವುತ್ ತಿಳಿಸಿದ್ದಾರೆ.
ಬಿಜೆಪಿಯೇತರ ಮುಖ್ಯಮಂತ್ರಿಗಳು ಸೇರಿದಂತೆ ಎಲ್ಲಾ ಪ್ರಮುಖ ವಿರೋಧ ಪಕ್ಷಗಳ ನಾಯಕರ ಸಭೆಯನ್ನು ಸೋನಿಯಾ ಕರೆದಿದ್ದಾರೆ.
ಈ ಸಭೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು ಭಾಗಿಯಾಗುತ್ತಿರುವುದು ಇನ್ನೂ ದೃಢಪಟ್ಟಿಲ್ಲ.
'ಪ್ರತಿಪಕ್ಷಗಳು ಒಂದಾಗಿವೆ ಮತ್ತು ಒಗ್ಗಟ್ಟಿನ ಶಕ್ತಿಯನ್ನು ಪ್ರದರ್ಶಿಸಲಿವೆ' ಎಂದು ರಾವುತ್ ಅಭಿಪ್ರಾಯಪಟ್ಟಿದ್ದಾರೆ.
'ಕಪಿಲ್ ಸಿಬಲ್ ನಿವಾಸದಲ್ಲಿ ವಿರೋಧ ಪಕ್ಷಗಳ ನಾಯಕರು ಇತ್ತೀಚೆಗೆ ಸಭೆ ನಡೆಸಿದ್ದಾರೆ. ಸೋನಿಯಾ ಗಾಂಧಿ ಅವರು ಬಿಜೆಪಿಯೇತರ ಮುಖ್ಯಮಂತ್ರಿಗಳು ಸೇರಿದಂತೆ ಎಲ್ಲಾ ಪ್ರಮುಖ ವಿರೋಧ ಪಕ್ಷಗಳ ನಾಯಕರ ಸಭೆಯನ್ನು ಕರೆದಿದ್ದಾರೆ' ಎಂದು ರಾವುತ್ ಹೇಳಿದ್ದಾರೆ.
ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ಬಿಜು ಜನತಾದಳದ ಪಿನಾಕಿ ಮಿಶ್ರಾ, ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್ ಒಬ್ರಿಯಾನ್, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಎಡ ಪಕ್ಷಗಳ ಮುಖಂಡರಾದ ಸೀತಾರಾಮ್ ಯೆಚೂರಿ ಮತ್ತು ಡಿ ರಾಜಾ, ಶಿರೋಮಣಿ ಅಕಾಲಿದಳದ ನರೇಶ್ ಗುಜ್ರಾಲ್, ಡಿಎಂಕೆಯ ತಿರುಚಿ ಶಿವ ಮತ್ತು ಆರ್ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಸೇರಿದಂತೆ ಇನ್ನೂ ಹಲವು ನಾಯಕರು ಕಪಿಲ್ ಸಿಬಲ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದರು ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.