ADVERTISEMENT

ಪತ್ರಕರ್ತೆ ಸೌಮ್ಯಾ ಹತ್ಯೆ ಪ್ರಕರಣ : ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣ–15 ವರ್ಷಗಳ ಬಳಿಕ ತೀರ್ಪು ಪ್ರಕಟ

ಪಿಟಿಐ
Published 25 ನವೆಂಬರ್ 2023, 11:30 IST
Last Updated 25 ನವೆಂಬರ್ 2023, 11:30 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div><div class="paragraphs"><p>&nbsp; &nbsp;</p></div>

ಪ್ರಾತಿನಿಧಿಕ ಚಿತ್ರ

   

   

ನವದೆಹಲಿ: ಹದಿನೈದು ವರ್ಷಗಳ ಹಿಂದೆ ನಡೆದಿದ್ದ ಟಿ.ವಿ ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣದಲ್ಲಿ ನಾಲ್ವರು ಅಪರಾಧಿಗಳಿಗೆ ನವದೆಹಲಿಯ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ADVERTISEMENT

5ನೇ ಅಪರಾಧಿ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗದಿದ್ದರೂ, ಕೃತ್ಯಕ್ಕೆ ಕಾರು ನೀಡಿದಕ್ಕಾಗಿ 3 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

‌ಅಪರಾಧಿಗಳಾದ ರವಿ ಕಪೂರ್, ಅಮಿತ್ ಶುಕ್ಲಾ, ಬಲ್ಜೀತ್ ಮಲಿಕ್ ಮತ್ತು ಅಜಯ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ ₹ 1.25 ಲಕ್ಷ ದಂಡ ಹಾಗೂ 5ನೇ ಅಪರಾಧಿ ಅಜಯ್ ಸೇಥಿಗೆ 3 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ₹7.25 ಲಕ್ಷ ದಂಡ ವಿಧಿಸಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ರವೀಂದ್ರ ಕುಮಾರ್ ಆದೇಶಿಸಿದ್ದಾರೆ.

ಅಪರಾಧಿಗಳಿಗೆ ವಿಧಿಸಲಾದ ಒಟ್ಟು ದಂಡದ ಮೊತ್ತದಲ್ಲಿ ₹ 12 ಲಕ್ಷಗಳನ್ನು ಸಂತ್ರಸ್ತೆಯ ಕುಟುಂಬಕ್ಕೆ ಪಾವತಿಸುವಂತೆ ನ್ಯಾಯಾಲಯ ಆದೇಶಿಸಿದೆ.

ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರು, 'ಅಪರಾಧವು ಅಪರೂಪದ ಪ್ರಕರಣಗಳ ವರ್ಗಕ್ಕೆ ಬರುವುದಿಲ್ಲ. ಹಾಗಾಗಿ ಮರಣದಂಡನೆಗೆ ಕೋರಿಕೆಯನ್ನು ತಿರಸ್ಕರಿಸಲಾಗಿದೆ' ಎಂದು ತಿಳಿಸಿದ್ದಾರೆ.

ವಿಚಾರಣೆ ವೇಳೆ ಸಂತ್ರಸ್ತೆಯ ತಾಯಿ ಮಾಧವಿ ವಿಶ್ವನಾಥನ್ ಅವರು, '15 ವರ್ಷಗಳಿಂದ ನ್ಯಾಯಕ್ಕಾಗಿ ಕಾಯುತ್ತಿದ್ದೇನೆ' ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಪ್ರಕರಣದ ಹಿನ್ನೆಲೆ:

ಪ್ರಮುಖ ಇಂಗ್ಲಿಷ್ ಸುದ್ದಿ ವಾಹಿನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸೌಮ್ಯಾ ವಿಶ್ವನಾಥನ್ ಅವರು , 2008ರ ಸೆಪ್ಟೆಂಬರ್ 30ರಂದು ಮುಂಜಾನೆ ದಕ್ಷಿಣ ದೆಹಲಿಯ ನೆಲ್ಸನ್ ಮಂಡೇಲಾ ಮಾರ್ಗದಲ್ಲಿ ಕೆಲಸ ಮುಗಿಸಿಕೊಂಡು ತನ್ನ ಕಾರಿನಲ್ಲಿ ಮನೆಗೆ ಮರಳುತ್ತಿದ್ದಾಗ ಹತ್ಯೆಗೀಡಾಗಿದ್ದರು. ದರೋಡೆ ಉದ್ದೇಶದಿಂದ ಈ ಹತ್ಯೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದರು. ಈ ಕೃತ್ಯ ರಾಷ್ಟ್ರದಾದ್ಯಂತ ಸುದ್ದಿಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.