
ಅಖಿಲೇಶ್ ಯಾದವ್
– ಪಿಟಿಐ ಚಿತ್ರ
ಲಖನೌ: 2024ರ ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಾರ್ಟಿ (ಎಸ್ಪಿ) ಹಾಗೂ ಇಂಡಿಯಾ ಮೈತ್ರಿಕೂಟ ಮುನ್ನಡೆ ಸಾಧಿಸಿರುವ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಸುಮಾರು 50 ಸಾವಿರ ಮತಗಳನ್ನು ತೆಗೆದು ಹಾಕಲು ಬಿಜೆಪಿ ಮತ್ತು ಚುನಾವಣಾ ಆಯೋಗ ಸಂಚು ರೂಪಿಸಿವೆ ಎಂದು ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್ ಯಾದವ್ ಶನಿವಾರ ಆರೋಪಿಸಿದರು.
ತಮ್ಮ ತಂದೆ ಮುಲಾಯಂ ಸಿಂಗ್ ಯಾದವ್ ಅವರ ಜನ್ಮದಿನವಾದ ಇಂದು (ನ.22) ಪಕ್ಷದ ಮುಖ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಉತ್ತರಪ್ರದೇಶ ಸೇರಿದಂತೆ 11 ರಾಜ್ಯಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ನಡುವೆ ಹಲವು ಆರೋಪಗಳು ಕೇಳಿ ಬಂದಿವೆ ಎಂದರು. ಈ ನಡುವೆ ಉತ್ತರಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ, ಚುನಾವಣಾ ಆಯೋಗದೊಂದಿಗೆ ಕೈಜೋಡಿಸಿ ಸಾಕಷ್ಟು ಮತಗಳನ್ನು ತೆಗೆದು ಹಾಕಲು ಸಂಚು ರೂಪಿಸಿವೆ ಎಂಬ ಮಾಹಿತಿ ಸಿಕ್ಕಿದೆ ಎಂದು ಹೇಳಿದರು.
2022ರ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ 255 ಸ್ಥಾನಗಳನ್ನು ಗೆದ್ದ ಬಿಜೆಪಿ, 2024ರ ಲೋಕಸಭೆ ಚುನಾವಣೆಯಲ್ಲಿ ಕೇವಲ 162 ವಿಧಾನಸಭಾ ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿತ್ತು. 111 ಸ್ಥಾನಗಳನ್ನು ಗೆದ್ದ ಎಸ್ಪಿ 183 ಕಡೆ ಮುನ್ನಡೆ ಕಾಯ್ದುಕೊಂಡಿತ್ತು. ಕೇವಲ ಎರಡು ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್ 40 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿತ್ತು ಎಂದರು.
ರಾಜ್ಯದಲ್ಲಿ ನೆಲೆ ಕಳೆದುಕೊಂಡಿರುವ ಬಿಜೆಪಿ ಇದನ್ನು ಅರಿತಿದ್ದು ಎಸ್ಐಆರ್ ಮೂಲಕ ನಾವು ಗೆದ್ದಿರುವ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲೂ ಸುಮಾರು 50 ಸಾವಿರ ಮತಗಳನ್ನು ತೆಗೆದು ಹಾಕಲು ದೊಡ್ಡ ಮಟ್ಟದಲ್ಲಿ ಸಿದ್ಧತೆ ಮಾಡಿಕೊಂಡಿದೆ. ಇದೇ ಸಂಚು ಪಶ್ಚಿಮ ಬಂಗಾಳದಲ್ಲೂ ನಡೆಯುತ್ತಿದ್ದು ನಾವು ಎಚ್ಚರದಿಂದ ಇದ್ದೇವೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.