ಲಖನೌ: ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ನಕಲಿ ಮತದಾನವನ್ನು ತಡೆಯುವುದಕ್ಕಾಗಿ, ಮತದಾರರ ಪಟ್ಟಿಯಲ್ಲಿರುವ ಎಲ್ಲ ನಕಲಿ ಹೆಸರುಗಳನ್ನು ತೆಗೆದುಹಾಕಿದ ಬಗ್ಗೆ ಚುನಾವಣಾ ಆಯೋಗವು ಭರವಸೆ ನೀಡಬೇಕು ಎಂದು ಸಮಾಜವಾದಿ ಪಕ್ಷ ಶುಕ್ರವಾರ ಆಗ್ರಹಿಸಿದೆ.
ಚುನಾವಣಾ ಆಯೋಗವು ಮತದಾರರ ಪಟ್ಟಿಯಿಂದ ಸಾಕಷ್ಟು ಸಂಖ್ಯೆಯಲ್ಲಿ ಖೊಟ್ಟಿ ಮತದಾರರ ಹೆಸರುಗಳನ್ನು ತೆಗೆದುಹಾಕಿದೆ. ಆ ನಂತರವೂ ನ.1ರಂದು ಪ್ರಕಟಿಸಲಾದ ಮತದಾರರ ಪಟ್ಟಿಯಲ್ಲಿ ಅಂಥ ಹೆಸರುಗಳು ಇನ್ನೂ ಉಳಿದಿರುವುದು ಕಳವಳಕಾರಿಯಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಸೂಚನೆ ಮೇರೆಗೆ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನರೇಶ್ ಉತ್ತಮ್ ಪಟೇಲ್ ಅವರು ಈ ವಿಚಾರವಾಗಿ ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ ಎಂದು ಸಮಾಜವಾದಿ ಪಕ್ಷವು ಪ್ರಕಟಣೆಯಲ್ಲಿ ತಿಳಿಸಿದೆ.
ಮತದಾರರ ಪಟ್ಟಿ ಪರಿಷ್ಕರಣೆ ಅವಧಿಯನ್ನು ನ.30ರಿಂದ ಡಿ.31ರ ವರೆಗೆ ವಿಸ್ತರಿಸಬೇಕು ಆಗ್ರಹಿಸಿರುವ ಸಮಾಜವಾದಿ ಪಕ್ಷ, ಇದರಿಂದ, ಪ್ರತಿಯೊಂದು ಮತಗಟ್ಟೆಯಲ್ಲಿಯೂ ಇರಬಹುದಾದ ಖೊಟ್ಟಿ ಮತದಾರರನ್ನು ಗುರುತಿಸಲು ಪಕ್ಷದ ಕಾರ್ಯಕರ್ತರಿಗೆ ಸಾಧ್ಯವಾಗಲಿದೆ ಎಂದು ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.