ಮುಂಬೈ (ಪಿಟಿಐ): ಹಣ ಅಕ್ರಮ ವರ್ಗಾವಣೆ ಆರೋಪ ಎದುರಿಸುತ್ತಿರುವಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ಪುತ್ರ ಹೃಷಿಕೇಶ್ ದೇಶಮುಖ್ ಅವರಿಗೆ ಸೋಮವಾರ ಇಲ್ಲಿನ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ)ಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗೆ ಗೊತ್ತುಪಡಿಸಿದ ವಿಶೇಷ ನ್ಯಾಯಾಲಯವು ಅವರ ಹಾಜರಾತಿಯನ್ನು ಪರಿಗಣಿಸಿ ಜಾಮೀನು ಮಂಜೂರು ಮಾಡಿದೆ.
ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಚಾರ್ಜ್ಶೀಟ್ ಸಲ್ಲಿಸಿದ ನಂತರ 2022ರ ಫೆಬ್ರುವರಿಯಲ್ಲಿ ನ್ಯಾಯಾಲಯವುಹೃಷಿಕೇಶ್ ಅವರಿಗೆ ಸಮನ್ಸ್ ನೀಡಿತ್ತು.
ದೂರಿನಲ್ಲಿ ಹೃಷಿಕೇಶ್ ಅವರನ್ನು ಆರೋಪಿ ಎಂದು ದಾಖಲಿಸಲಾಗಿತ್ತು. ನ್ಯಾಯಾಲಯದ ಮುಂದೆ ಹಾಜರಾದ ನಂತರ ಅವರ ಪರ ವಕೀಲ ಅನಿಕೇತ್ ನಿಖಂ ಅರ್ಜಿ ಸಲ್ಲಿಸಿ ಜಾಮೀನು ಮಂಜೂರು ಮಾಡುವಂತೆ ಕೋರಿದ್ದರು.ಈಗ ಇಲ್ಲಿನ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.