ADVERTISEMENT

ಇಂದು ಪ್ರಣವ್ ಮುಖರ್ಜಿ ಅಂತ್ಯ ಸಂಸ್ಕಾರ: ರಾಷ್ಟ್ರಪತಿ, ಪ್ರಧಾನಿಯಿಂದ ಅಂತಿಮ ನಮನ

ಏಜೆನ್ಸೀಸ್
Published 1 ಸೆಪ್ಟೆಂಬರ್ 2020, 8:34 IST
Last Updated 1 ಸೆಪ್ಟೆಂಬರ್ 2020, 8:34 IST
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಂಗಳವಾರ ದಿವಂಗತ ಪ್ರಣಬ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಂಗಳವಾರ ದಿವಂಗತ ಪ್ರಣಬ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು    

ನವದೆಹಲಿ: ಸೋಮವಾರ ಮೃತಪಟ್ಟ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಪುಷ್ಪನಮನ ಸಲ್ಲಿಸಿದರು.

ಮುಖರ್ಜಿ ಅವರ ಪಾರ್ಥಿವ ಶರೀರವನ್ನು ಸೇನಾ ಆಸ್ಪತ್ರೆಯಿಂದ '10, ರಾಜಾಜಿ ಮಾರ್ಗ'ದಲ್ಲಿ ಇರುವ ಅವರ ನಿವಾಸಕ್ಕೆ ತಂದು ಇಡಲಾಗಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ, ವಾಯುಸೇನೆ ಮುಖ್ಯಸ್ಥ ಆರ್.ಕೆ.ಎಸ್. ಭಡೌರಿಯಾ, ನೌಕಾಪಡೆ ಮುಖ್ಯಸ್ಥ ಕರಂಬಿರ್ ಸಿಂಗ್ ಅವರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಮಧ್ಯಾಹ್ನದ ನಂತರ ಅಂತ್ಯಕ್ರಿಯೆ ನಡೆಯಲಿದೆ.

ADVERTISEMENT

ಪ್ರಣವ್ ನಿಧನದ ಕಾರಣ ಆಗಸ್ಟ್ 31 ರಿಂದ ಸೆಪ್ಟೆಂಬರ್ 6 ರವರೆಗೆ ದೇಶದಾದ್ಯಂತ ಶೋಕಾಚರಣೆ ಇರಲಿದೆ ಎಂದು ಗೃಹ ಸಚಿವಾಲಯ ಪ್ರಕಟಿಸಿದೆ.

ಶೋಕಾಚರಣೆ ವೇಳೆ ದೇಶದಾದ್ಯಂತ ರಾಷ್ಟ್ರ ಧ್ವಜವನ್ನು ಅರ್ಧಕ್ಕಿಳಿಸಿ ಹಾರಾಟ ನಡೆಸಲಾಗುವುದು. ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮಳಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದೇ ವೇಳೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲೂ ಶೋಕಾಚರಣೆ ಘೋಷಿಸಲಾಗಿದೆ.

‘ಭಾರತ ರತ್ನ ಪ್ರಣವ್ ಮುಖರ್ಜಿ ಅವರ ನಿಧನಕ್ಕೆ ಇಡೀ ದೇಶವೇ ದುಃಖಿಸುತ್ತಿದೆ. ನಮ್ಮ ದೇಶದ ಅಭಿವೃದ್ಧಿ ಪಥದಲ್ಲಿ ಅವರ ಅಳಿಸಲಾಗದ ಹೆಜ್ಜೆಗುರುತುಗಳಿವೆ. ಶ್ರೇಷ್ಠ ವಿದ್ವಾಂಸ, ಅತ್ಯುತ್ತಮ ರಾಜಕಾರಣಿಯಾಗಿದ್ದ ಅವರನ್ನು ಸಮಾಜದ ಎಲ್ಲ ವರ್ಗದವರೂ ಮೆಚ್ಚಿಕೊಂಡಿದ್ದರು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.