ADVERTISEMENT

ನೇಮಕದಲ್ಲಿ ಹಸ್ತಕ್ಷೇಪ ನ್ಯಾಯಾಂಗಕ್ಕೆ ಒಳಿತಲ್ಲ: ಸುಪ್ರೀಂ ಕೋರ್ಟ್‌ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2019, 19:45 IST
Last Updated 23 ಸೆಪ್ಟೆಂಬರ್ 2019, 19:45 IST
   

ನವದೆಹಲಿ: ನ್ಯಾಯಮೂರ್ತಿಗಳ ನೇಮಕ ಮತ್ತು ವರ್ಗಾವಣೆಯಲ್ಲಿ ಹಸ್ತಕ್ಷೇಪ ನ್ಯಾಯಾಂಗಕ್ಕೆ ಒಳ್ಳೆಯದಲ್ಲ ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಹೇಳಿದೆ.

‘ನೇಮಕಾತಿ ಮತ್ತು ವರ್ಗಾವಣೆಯು ನ್ಯಾಯಾಂಗ ಆಡಳಿತದ ತಳಪಾಯ. ಈ ವಿಚಾರದಲ್ಲಿ ನ್ಯಾಯಾಂಗದ ಪರಾಮರ್ಶೆಗೆ ತೀವ್ರ ನಿರ್ಬಂಧ ಇದೆ’ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ನೇತೃತ್ವದ ಪೀಠ ಹೇಳಿದೆ.

ನ್ಯಾಯಮೂರ್ತಿ ಖುರೇಷಿ ಅವರ ಬಡ್ತಿಯ ಶಿಫಾರಸಿನ ಬಗ್ಗೆ ನಿರ್ಧಾರ ಕೈಗೊಳ್ಳಲು ಕೇಂದ್ರ ಸರ್ಕಾರವು ವಿಳಂಬ ಮಾಡಿರುವುದನ್ನು ಪ್ರಶ್ನಿಸಿ ಗುಜರಾತ್‌ ಹೈಕೋರ್ಟ್‌ ವಕೀಲರ ಸಂಘವು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಲಾಗಿದೆ.

ADVERTISEMENT

ಖುರೇಷಿ ಅವರಿಗೆ ಮಧ್ಯಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಬಡ್ತಿ ನೀಡುವಂತೆ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಮೇ 10ರಂದು ಕೇಂದ್ರಕ್ಕೆ ಶಿಫಾರಸು ಕಳುಹಿಸಿತ್ತು.

ಶಿಫಾರಸಿನ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಆ. 22 ಮತ್ತು 27ರಂದು ಸರ್ಕಾರವು ಎರಡು ಪತ್ರಗಳನ್ನು ಕೊಲಿಜಿಯಂಗೆ ಬರೆದಿತ್ತು. ದಾಖಲೆಗಳನ್ನೂ ಸಲ್ಲಿಸಿತ್ತು. ಇದರ ಆಧಾರದಲ್ಲಿ ಕೊಲಿಜಿಯಂ ತನ್ನ ಶಿಫಾರಸನ್ನು ಸೆ. 5ರಂದು ಮಾರ್ಪಡಿಸಿ, ಖುರೇಷಿ ಅವರನ್ನು ತ್ರಿಪುರಾ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನೇಮಿಸಲು ಶಿಫಾರಸು ಮಾಡಿತ್ತು.

2010ರಲ್ಲಿ ಗುಜರಾತ್‌ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಖುರೇಷಿ ಅವರು ಅಮಿತ್‌ ಶಾ ಅವರನ್ನು ಎನ್‌ಕೌಂಟರ್‌ ಪ್ರಕರಣಗಳಲ್ಲಿ ಪೊಲೀಸ್‌ ಕಸ್ಟಡಿಗೆ ಒಪ್ಪಿಸಲು ಅವಕಾಶ ಕೊಟ್ಟಿದ್ದರು. ಖುರೇಷಿ ಅವರು ಈಗ ಬಾಂಬೆ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.