ADVERTISEMENT

ಅಸಾರಾಂ ಬೆಂಬಲಿಗರಿಂದ ಬೆದರಿಕೆ ಎಂದ ಡಿಸ್ಕವರಿ ಚಾನಲ್:ಕರ್ನಾಟಕಕ್ಕೆ ನೋಟಿಸ್ ಜಾರಿ?

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2025, 9:43 IST
Last Updated 6 ಫೆಬ್ರುವರಿ 2025, 9:43 IST
ಅಸಾರಾಂ ಬಾಪು
ಅಸಾರಾಂ ಬಾಪು   

ನವದೆಹಲಿ: ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ಅವರ ಬೆಂಬಲಿಗರು ಬೆದರಿಕೆ ಹಾಕುತ್ತಿರುವ ಹಿನ್ನೆಲೆ ‘ಡಿಸ್ಕವರಿ’ ಚಾನೆಲ್‌ನ ಸಿಬ್ಬಂದಿ ಮತ್ತು ಕಚೇರಿಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಪೊಲೀಸರಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಜನವರಿ 25ರಂದು ‘ಕಲ್ಟ್ ಆಫ್ ಫಿಯರ್: ಅಸಾರಾಂ ಬಾಪು?’ ಎಂಬ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡಿದ ಬಳಿಕ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ಅವರ ಬೆಂಬಲಿಗರು ಬೆದರಿಕೆ ಹಾಕುತ್ತಿದ್ದು, ರಕ್ಷಣೆ ಒದಗಿಸುವಂತೆ ಕೋರಿ ಡಿಸ್ಕವರಿ ಚಾನೆಲ್‌ನ ಒಟಿಟಿ ಪ್ಲಾಟ್‌ಫಾರ್ಮ್‌ನ ಸಿಬ್ಬಂದಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಇಂದು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ಸಂಜಯ್ ಕುಮಾರ್ ಅವರ ಪೀಠವು ಅರ್ಜಿದಾರರಾದ ಶಶಾಂಕ್ ವಾಲಿಯಾ ಸೇರಿ ಇತರರು ಹಾಗೂ ಅವರು ಕಚೇರಿಗಳಿಗೆ ಪೊಲೀಸ್ ಭದ್ರತೆ ಒದಗಿಸುವಂತೆ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದೆ.

ADVERTISEMENT

ಶಶಾಂಕ್ ವಾಲಿಯಾ ಮತ್ತು ಇತರರ ರಿಟ್ ಅರ್ಜಿಯ ಮೇರೆಗೆ ನ್ಯಾಯಾಲಯವು ಕೇಂದ್ರ ಸರ್ಕಾರ ಮತ್ತು ಮಹಾರಾಷ್ಟ್ರ, ಕರ್ನಾಟಕ, ಹರಿಯಾಣ, ತಮಿಳುನಾಡು, ತೆಲಂಗಾಣ, ಪಶ್ಚಿಮ ಬಂಗಾಳ ಮತ್ತು ದೆಹಲಿ ಸರ್ಕಾರಗಳಿಗೆ ನೋಟಿಸ್ ಜಾರಿಗೊಳಿಸಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿನವ್ ಮುಖರ್ಜಿ, ದೂರು ನೀಡಿದ ನಂತರವೂ ಅಸಾರಾಂ ಬಾಪು ಬೆಂಬಲಿಗರ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

‘ಡಿಸ್ಕವರಿ’ ಚಾನೆಲ್‌ನಲ್ಲಿ ಪ್ರಸಾರ ಮಾಡಿರುವ ಸಾಕ್ಷ್ಯಚಿತ್ರವು ಸಾರ್ವಜನಿಕ ಹಿತಾಸಕ್ತಿಯನ್ನು ಒಳಗೊಂಡಿದೆ. ಇದು ಅಪರಾಧಿ ವ್ಯಕ್ತಿಯ ಚಟುವಟಿಕೆಗಳ ಮೇಲೆ ಬೆಳಕು ಚೆಲ್ಲುವುದರ ಜತೆಗೆ ವೀಕ್ಷಕರಿಗೆ ಅಂಧಶ್ರದ್ಧೆ ಮತ್ತು ಆರಾಧನೆಗಳ ಸಮತೋಲಿತ ದೃಷ್ಟಿಕೋನ ನೀಡುವ ಉದ್ದೇಶವನ್ನು ಹೊಂದಿದೆ ಎಂದು ಅಭಿನವ್ ಮುಖರ್ಜಿ ವಾದರಿಸಿದ್ದಾರೆ.

‘ಡಿಸ್ಕವರಿ’ ಚಾನೆಲ್‌ನ ಸಿಬ್ಬಂದಿಗೆ ಬೆದರಿಕೆ ಹಾಕುವ ಮೂಲಕ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಪ್ರಯತ್ನಿಸಲಾಗುತ್ತಿದೆ. ಇದು ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಹಾನಿಕರ. ಇದು ಕಾನೂನುಬಾಹಿರ ಮತ್ತು ಕ್ರಿಮಿನಲ್ ಕೃತ್ಯವಾಗಿದೆ ಎಂದು ಮುಖರ್ಜಿ ಪ್ರತಿಪಾದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.