ನವದೆಹಲಿ: ಸಮನ್ಸ್ಗಳಿಂದ ತಪ್ಪಿಸಿಕೊಳ್ಳಲು ಇಲ್ಲವೇ ಜಾಮೀನು ಪಡೆಯುವುದಕ್ಕಾಗಿ ಕೆಲ ಆರೋಪಿಗಳು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ)ಯ ನಿಬಂಧನೆಗಳ ಸಿಂಧುತ್ವವನ್ನೇ ಪ್ರಶ್ನಿಸುವುದನ್ನು ರೂಢಿಸಿಕೊಂಡಿದ್ದಾರೆ ಎಂದು ಸುಪ್ರೀಂಕೋರ್ಟ್ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿತು.
ನ್ಯಾಯಮೂರ್ತಿಗಳಾದ ಬೇಲಾ ಎಂ.ತ್ರಿವೇದಿ ಹಾಗೂ ಪ್ರಶಾಂತಕುಮಾರ್ ಮಿಶ್ರಾ ಅವರಿದ್ದ ರಜಾಕಾಲದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು. ಛತ್ತೀಸಗಡದಲ್ಲಿ ನಡೆದಿದೆ ಎನ್ನಲಾದ ಅಬಕಾರಿ ಹಗರಣದ ಆರೋಪಿಯೊಬ್ಬರು ಮೇಲ್ಮನವಿ ಸಲ್ಲಿಸಿದ್ದರು.
‘ಪರಿಹಾರ ಕೋರಿ, ಹಣ ಅಕ್ರಮ ವರ್ಗಾವಣೆ ಕಾಯ್ದೆಯ ವಿರುದ್ಧ ಸಲ್ಲಿಕೆಯಾಗುವ ಇಂಥ ಮೇಲ್ಮನವಿಗಳು, ನ್ಯಾಯ ಪಡೆಯುವುದಕ್ಕಾಗಿ ಇರುವ ಇತರ ವೇದಿಕೆಗಳಿಂದ ಅರ್ಜಿದಾರರನ್ನು ವಂಚಿತರನ್ನಾಗಿ ಮಾಡುತ್ತವೆ’ ಎಂದು ನ್ಯಾಯಪೀಠ ಹೇಳಿತು.
ಜಾರಿ ನಿರ್ದೇಶನಾಲಯ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಪಿಎಂಎಲ್ಎದ ಕೆಲ ನಿಬಂಧನೆಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ಸಮರ್ಥನೀಯವಲ್ಲ ಎಂದು ವಾದಿಸಿದರು. ಇಂಥ ಅರ್ಜಿಗಳ ಬಗ್ಗೆ ಆದೇಶದಲ್ಲಿ ನ್ಯಾಯಾಲಯ ತನ್ನ ಅಭಿಪ್ರಾಯಗಳನ್ನು ದಾಖಲಿಸಬೇಕು ಎಂದೂ ಮನವಿ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.