ನವದೆಹಲಿ: ಜಾತ್ಯತೀತ, ಪಾರದರ್ಶಕ ಮತ್ತು ನ್ಯಾಯವನ್ನು ಉತ್ತೇಜಿಸಲು ರಾಜಕೀಯ ಪಕ್ಷಗಳ ನೋಂದಣಿ ಮತ್ತು ನಿಯಂತ್ರಣಕ್ಕಾಗಿ ನಿಯಮಗಳನ್ನು ರೂಪಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜಾಯ್ಮಾಲ್ಯ ಬಾಗ್ಚಿ ಅವರ ಪೀಠವು ಈ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ಶುಕ್ರವಾರ ನಿರ್ಧರಿಸಿತು. ಅಲ್ಲದೆ ಅರ್ಜಿಯು ನೋಂದಾಯಿತ ರಾಷ್ಟ್ರೀಯ ರಾಜಕೀಯ ಪಕ್ಷಗಳನ್ನು ಒಳಗೊಳ್ಳುವಂತೆ ಉಲ್ಲೇಖಿಸಲು ಪೀಠವು ಅರ್ಜಿದಾರ ಅಶ್ವಿನಿ ಉಪಾಧ್ಯಾಯ ಅವರಿಗೆ ಹೇಳಿತು.
ಈ ಅರ್ಜಿ ಕುರಿತು ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರ, ಭಾರತ ಕಾನೂನು ಆಯೋಗಕ್ಕೂ ಪೀಠ ನೋಟಿಸ್ ಜಾರಿ ಮಾಡಿತು.
ದೇಶದಲ್ಲಿ ರಾಜಕೀಯ ಪಕ್ಷಗಳಿಗೆ ಯಾವುದೇ ನಿಯಮ ಮತ್ತು ನಿಬಂಧನೆಗಳಿಲ್ಲ. ಇದರಿಂದಾಗಿ ಅನೇಕ ಪ್ರತ್ಯೇಕತಾವಾದಿಗಳು ದೇಣಿಗೆ ಸಂಗ್ರಹಿಸಲು ತಮ್ಮದೇ ಆದ ರಾಜಕೀಯ ಪಕ್ಷಗಳನ್ನು ರಚಿಸಿಕೊಂಡಿದ್ದಾರೆ. ಈ ಪಕ್ಷಗಳ ಕೆಲ ಪದಾಧಿಕಾರಿಗಳು ಪೊಲೀಸರ ರಕ್ಷಣೆಯನ್ನೂ ಪಡೆಯುತ್ತಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.