ನವದೆಹಲಿ: ಪ್ರಮುಖ ವಿಧೇಯಕಗಳಿಗೆ ಒಪ್ಪಿಗೆ ನೀಡದೆ ರಾಜ್ಯಪಾಲರು ತಡೆಹಿಡಿದಿರುವ ಬಗ್ಗೆ ಕೇರಳ ಮತ್ತು ಪಶ್ಚಿಮ ಬಂಗಾಳ ಸರ್ಕಾರಗಳು ಸಲ್ಲಿಸಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿದೆ.
ಅರ್ಜಿಗಳ ವಿಚಾರಣೆಯನ್ನು ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ನೇತೃತ್ವದ ಪೀಠವು ಕೇಂದ್ರ ಸರ್ಕಾರ ಮತ್ತು ಕೇರಳ ಮತ್ತು ಪಶ್ಚಿಮ ಬಂಗಾಳ ರಾಜ್ಯಪಾಲರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ನೋಟಿಸ್ ಜಾರಿ ಮಾಡಿದೆ. ಜತೆಗೆ, ಮೂರು ವಾರಗಳಲ್ಲಿ ವಿವರವಾದ ವರದಿ ಸಲ್ಲಿಸುವಂತೆ ಆದೇಶಿಸಿದೆ.
ವಿಧೇಯಕಗಳಿಗೆ ರಾಜ್ಯಪಾಲರು ಒಪ್ಪಿಗೆ ನೀಡದೆ ತಿಂಗಳುಗಟ್ಟಲೆ ತಡೆಹಿಡಿದಿರುವುದನ್ನು ಪ್ರಶ್ನಿಸಿ ಕೇರಳ ಮತ್ತು ಪಶ್ಚಿಮ ಬಂಗಾಳ ಸರ್ಕಾರಗಳು ಸುಪ್ರೀಂ ಕೋರ್ಟ್ಗೆ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದವು.
ಕೇರಳ ಮತ್ತು ಪಶ್ಚಿಮ ಬಂಗಾಳ ಸರ್ಕಾರಗಳ ಪರವಾಗಿ ಹಿರಿಯ ವಕೀಲರಾದ ಕೆ.ಕೆ. ವೇಣುಗೋಪಾಲ್ ಮತ್ತು ಎ. ಎಂ. ಸಿಂಘ್ವಿ ಅವರು ವಾದ ಮಂಡಿಸಿದ್ದಾರೆ.
ರಾಜ್ಯಪಾಲರು ವಿಧೇಯಕಗಳಿಗೆ ಅನುಮೋದನೆ ನೀಡಬೇಕು ಅಥವಾ ತಿರಸ್ಕರಿಸಬೇಕು ಎಂಬುದರ ಬಗ್ಗೆ ನ್ಯಾಯಾಲಯವು ಮಾರ್ಗಸೂಚಿಗಳನ್ನು ಪ್ರಕಟಿಸಬೇಕು ಎಂದು ವೇಣುಗೋಪಾಲ್ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.