ADVERTISEMENT

ಭೀಮಾ ಕೋರೆಗಾಂವ್‌ ಪ್ರಕರಣ: ಗೌತಮ್ ನವಲಖಾ ಜಾಮೀನು ವಜಾಗೊಳಿಸಿದ ಸುಪ್ರೀಂ

ಪಿಟಿಐ
Published 12 ಮೇ 2021, 8:24 IST
Last Updated 12 ಮೇ 2021, 8:24 IST
ಸಾಮಾಜಿಕ ಹೋರಾಟಗಾರ ಗೌತಮ್‌ ನವಲಖಾ
ಸಾಮಾಜಿಕ ಹೋರಾಟಗಾರ ಗೌತಮ್‌ ನವಲಖಾ   

ನವದೆಹಲಿ: ಭೀಮಾ ಕೋರೆಗಾಂವ್‌ ಪ್ರಕರಣದ ಆರೋಪಿ, ಸಾಮಾಜಿಕ ಹೋರಾಟಗಾರ ಗೌತಮ್‌ ನವಲಖಾ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಬುಧವಾರ ವಜಾಗೊಳಿಸಿದೆ.

ಫೆಬ್ರುವರಿ 8 ರಂದು ಬಾಂಬೆ ಹೈಕೋರ್ಟ್, ನವಲಖಾ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಅವರು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು. ನ್ಯಾಯಮೂರ್ತಿ ಯು.ಯು. ಲಲಿತ್‌ ಮತ್ತು ಕೆ.ಎಂ.ಜೋಸೆಫ್‌ ಅವರನ್ನು ಒಳಗೊಂಡ ನ್ಯಾಯಪೀಠವು ನವಲಖಾ ಅವರ ಮನವಿಯನ್ನು ತಿರಸ್ಕರಿಸಿದೆ.

ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌, ಮಾರ್ಚ್‌ 26ರಂದು ತೀರ್ಪು ಕಾಯ್ದಿರಿಸಿತ್ತು.

ADVERTISEMENT

ಎಲ್ಗಾರ್‌ ಪರಿಷದ್‌–ಮಾವೊ ನಡುವೆ ಸಂಪರ್ಕ ಇದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನವಲಖಾ ಅವರನ್ನು ಬಂಧಿಸಲಾಗಿತ್ತು. ಡಿಸೆಂಬರ್‌ 31, 2017ರಲ್ಲಿ ಪುಣೆಯಲ್ಲಿ ನಡೆದ ಎಲ್ಗಾರ್‌ ಪರಿಷದ್‌ ಸಭೆಯಲ್ಲಿ ಹೋರಾಟಗಾರರೊಬ್ಬರು ಮಾಡಿದ ಭಾಷಣವು ಭೀಮಾ ಕೋರೆಗಾಂವ್‌ ಹಿಂಸಾಚಾರಕ್ಕೆ ಪ್ರಚೋದನೆ ನೀಡಿತ್ತು. ಇದು ಮಾವೋವಾದಿಗಳ ಬೆಂಬಲಿತ ಸಭೆಯಾಗಿತ್ತು ಎಂಬುದಾಗಿ ಪ್ರಕರಣ ದಾಖಲಿಸಲಾಗಿತ್ತು.

2020ರ ಜನವರಿಯಲ್ಲಿ ಮತ್ತೊಮ್ಮೆ ಎಫ್‌ಐಆರ್‌ ದಾಖಲಿಸಲಾಗಿತ್ತು, ನವಲಖಾ ಕಳೆದ ವರ್ಷ ಏಪ್ರಿಲ್‌ 14ರಂದು ಎನ್‌ಐಎ ಮುಂದೆ ಶರಣಾಗಿದ್ದರು. ಏಪ್ರಿಲ್‌ 25ರ ವರೆಗೂ ಎನ್‌ಐಎ ಕಸ್ಟಡಿಯ ಬಳಿಕ ಅವರನ್ನು ನವಿ ಮುಂಬೈನ ತಲೊಜಾ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿಡಲಾಗಿದೆ.

ನಿಗದಿತ ಸಮಯದಲ್ಲಿ ಚಾರ್ಜ್‌ಶೀಟ್‌ ಸಲ್ಲಿಸದೆಯೇ ಬಂಧನದಲ್ಲಿಡಲಾಗಿದೆ, ಹಾಗಾಗಿ ಶಾಸನಬದ್ಧ ಜಾಮೀನು ನೀಡುವಂತೆ ನವಲಖಾ ಕೋರ್ಟ್‌ಗೆ ಮನವಿ ಮಾಡಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೋರ್ಟ್‌ ಮಾರ್ಚ್‌ 3ರಂದು ಎನ್‌ಐಎಗೆ ಸೂಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.