ADVERTISEMENT

ಫರೀದಾಬಾದ್‌: ಅರಣ್ಯ ಅತಿಕ್ರಮಣ ತೆರವಿಗೆ ಸುಪ್ರೀಂ ಕೋರ್ಟ್‌ ಸೂಚನೆ

ಆರು ವಾರಗಳಲ್ಲಿ ವರದಿ ಸಲ್ಲಿಕೆಗೆ ಆದೇಶ

ಪಿಟಿಐ
Published 7 ಜೂನ್ 2021, 9:59 IST
Last Updated 7 ಜೂನ್ 2021, 9:59 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಹತ್ತು ಸಾವಿರ ವಸತಿ ನಿರ್ಮಾಣ ಸೇರಿದಂತೆ, ಫರೀದಾಬಾದ್‌ ಜಿಲ್ಲೆಯ ಲಕಾರ್ಪುರ ಖೋರಿ ಹಳ್ಳಿ ಸಮೀಪದ ಅರಾವಳಿ ಅರಣ್ಯ ಪ್ರದೇಶದ ಎಲ್ಲ ಅತಿಕ್ರಮಣವನ್ನೂ ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಹರಿಯಾಣ ಮತ್ತು ಫರೀದಾಬಾದ್‌ ಮುನ್ಸಿಪಲ್ ಕಾರ್ಪೊರೇಷನ್‌ಗಳಿಗೆ ನಿರ್ದೇಶನ ನೀಡಿದೆ.

ಈ ಮೂಲಕ ಭೂಗಳ್ಳರು ಯಾವುದೇ ಕಾರಣಕ್ಕೂ ಕಾನೂನಿನ ಆಶ್ರಯ ಪಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಸಿದೆ.

ನ್ಯಾಯಮೂರ್ತಿಗಳಾದ ಎ ಎಂ ಖಾನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರ ರಜಾದಿನಗಳ ನ್ಯಾಯಪೀಠ, ಆರು ವಾರಗಳಲ್ಲಿ ಅರಣ್ಯ ಅತಿಕ್ರಮಣವನ್ನು ತೆರವುಗೊಳಿಸಿ, ವರದಿ ನೀಡುವಂತೆ ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ಸೂಚಿಸಿತು.

ADVERTISEMENT

‘ನಮ್ಮ ಅಭಿಪ್ರಾಯದಂತೆ ಅರ್ಜಿದಾರರು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನೀಡಿದ ಆದೇಶಗಳಿಗೆ ಬದ್ಧರಾಗಿರುತ್ತಾರೆ‘ ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ. ಪುನರ್ವಸತಿ ಮನವಿಯನ್ನು ರಾಜ್ಯ ಸರ್ಕಾರ ಸ್ವತಂತ್ರವಾಗಿ ಪರಿಗಣಿಸಬಹುದು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ವಿಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆ ನಡೆಸಿದ ನ್ಯಾಯಾಲಯ, ಈ ಒತ್ತುವರಿ ತೆರವು ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆ ಅಧಿಕಾರಿಗಳಿಗೆ ರಕ್ಷಣೆ ನೀಡುವಂತೆ ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ ಅವರಿಗೆ ನಿರ್ದೇಶನ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.