ADVERTISEMENT

ಸುವೇಂದು ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ

​ಪ್ರಜಾವಾಣಿ ವಾರ್ತೆ
Published 2 ಜನವರಿ 2023, 11:18 IST
Last Updated 2 ಜನವರಿ 2023, 11:18 IST
   

ನವದೆಹಲಿ: ಹೈಕೋರ್ಟ್‌ನಿಂದ ಪೂರ್ವಾನುಮತಿ ಪಡೆಯದೇ ಬಿಜೆಪಿ ನಾಯಕ ಸುವೇಂದು ಅಧಿಕಾರಿ ವಿರುದ್ಧ ಹೊಸ ಎಫ್‌ಐಆರ್‌ ದಾಖಲಿಸುವುದಕ್ಕೆ ತಡೆ ನೀಡಿ ಕೋಲ್ಕತ್ತ ಹೈಕೋರ್ಟ್‌ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಪಶ್ಚಿಮ ಬಂಗಾಳ ಸಚಿವೆ ಬಿರ್ಬಾಹ ಹಂಸ್ದ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ತಿರಸ್ಕರಿಸಿದೆ.

ಪಶ್ಚಿಮ ಬರ್ಧಾಮನ್‌ ಜಿಲ್ಲೆಯಲ್ಲಿ ಡಿಸೆಂಬರ್‌ನಲ್ಲಿ ನಡೆದಿದ್ದ ‘ಹೊದಿಕೆ ವಿತರಣೆ ಕಾರ್ಯಕ್ರಮದ’ ವೇಳೆ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಸಲ್ಲಿಸಲಾಗಿದ್ದ ಅರ್ಜಿ ಇದಾಗಿದ್ದು, ಈ ಪ್ರಕರಣ ಕುರಿತು ಕೋಲ್ಕತ್ತ ಹೈಕೋರ್ಟ್‌ನಲ್ಲಿಯೇ ಅರ್ಜಿ ಸಲ್ಲಿಸುವಂತೆ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿ ಪಿ.ಎಸ್‌. ನರಸಿಂಹ ಅವರಿದ್ದ ಪೀಠವು ಬಿರ್ಬಾಹ ಅವರಿಗೆ ಹೇಳಿದೆ. ಈ ಪ್ರಕರಣವು ಸುಪ್ರೀಂ ಕೋರ್ಟ್‌ ಅಧಿಕಾರ ವ್ಯಾಪ್ತಿಗೆ ಬರುವುದಿಲ್ಲ ಎಂದು ಪೀಠ ತಿಳಿಸಿದೆ.

ಜೊತೆಗೆ ಇದೇ ಪ್ರಕರಣ ಕುರಿತು ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜನವರಿ 10ರಂದು ನಡೆಸುವುದಾಗಿ ಹೈಕೋರ್ಟ್‌ ಹೇಳಿದೆ. ಹೀಗಾಗಿ ಅರ್ಜಿದಾರರು ಈ ಅರ್ಜಿಯನ್ನೂ ಹೈಕೋರ್ಟ್‌ಗೆ ಸಲ್ಲಿಸಲು ಸುಪ್ರೀಂ ಕೋರ್ಟ್‌ ಅನುಮತಿ ನೀಡುತ್ತದೆ ಎಂದು ಪೀಠ ತಿಳಿಸಿದೆ.

ADVERTISEMENT

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಸುವೇಂದು ಅಧಿಕಾರಿ ಮತ್ತಿತರರ ವಿರುದ್ಧ ಪೂರ್ವಾಮತಿ ಪಡೆಯದೇ ಎಫ್‌ಐಆರ್‌ ದಾಖಲಿಸದಂತೆ ಪಶ್ಚಿಮ ಬಂಗಾಳ ಪೊಲೀಸರಿಗೆ ಕೋಲ್ಕತ್ತ ಹೈಕೋರ್ಟ್‌ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಕೋಲ್ಕತ್ತ ಹೈಕೋರ್ಟ್‌ನಲ್ಲಿಯೇ ಈ ಸಂಬಂಧ ಅರ್ಜಿ ಸಲ್ಲಿಸಲು ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರಕ್ಕೆ ಆದೇಶಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿ ಬಿರ್ಬಾಹ ಅವರು ಸುಪ್ರೀಂ ಕೋರ್ಟ್‌ಗೆ ಹೊಸ ಅರ್ಜಿ ಸಲ್ಲಿಸಿದ್ದಾರೆ.

ಕಾಲ್ತುಳಿತದಲ್ಲಿ ಮೂವರು ಮೃತಪಟ್ಟು ಐವರು ಗಂಭೀರವಾಗಿ ಗಾಯಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.