ADVERTISEMENT

ಮತದಾರರ ಪಟ್ಟಿ ಪರಿಷ್ಕರಣೆ: ಚು. ಆಯೋಗದ ವಿರುದ್ಧದ ಅರ್ಜಿಗಳ ವಿಚಾರಣೆಗೆ SC ಸಮ್ಮತಿ

ಪಿಟಿಐ
Published 7 ಜುಲೈ 2025, 7:16 IST
Last Updated 7 ಜುಲೈ 2025, 7:16 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಮಾಡುವ ಕೇಂದ್ರ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಜುಲೈ 10ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.

ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಜಾಯ್‌ಮಾಲ್ಯ ಬಾಗ್ಚಿ ಅವರನ್ನು ಒಳಗೊಂಡ ನ್ಯಾಯಪೀಠವು, ಹಲವು ಅರ್ಜಿದಾರರ ಪರವಾಗಿ ಹಿರಿಯ ವಕೀಲ ಕಪಿಲ್‌ ಸಿಬಲ್ ಅವರು ನೀಡಿದ ಮನವಿಯನ್ನು ಸೋಮವಾರ ಪುರಸ್ಕರಿಸಿತು.

ಆರ್‌ಜೆಡಿ ಸಂಸದ ಮನೋಜ್‌ ಝಾ ಅವರ ಪರ ಹಾಜರಿದ್ದ ಸಿಬಲ್‌ ಅವರು, ಅರ್ಜಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗಕ್ಕೆ ನೋಟಿಸ್‌ ರವಾನಿಸುವಂತೆ ಒತ್ತಾಯಿಸಿದರು. ನಿಗದಿತ ಕಾಲಮಿತಿಯ ಒಳಗೆ ಮತದಾರ ಪಟ್ಟಿ ಪರಿಷ್ಕರಣೆ ಅಸಾಧ್ಯ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದರು.

ADVERTISEMENT

ಮತ್ತೊಬ್ಬ ಅರ್ಜಿದಾರರ ಪರ ಹಾಜರಿದ್ದ ಹಿರಿಯ ವಕೀಲ ಅಭಿಷೇಕ್‌ ಸಿಂಘ್ವಿ ಅವರು, ‘ರಾಜ್ಯದಲ್ಲಿ ಸುಮಾರು 8 ಕೋಟಿ ಮತದಾರರಿದ್ದಾರೆ. ಮತದಾರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಈ ಪೈಕಿ 4 ಕೋಟಿ ಮಂದಿ ಮಾತ್ರ ತಮ್ಮ ದಾಖಲೆಯನ್ನು ಸಲ್ಲಿಸಬಹುದು’ ಎಂದರು.

‘ಕಾಲಮಿತಿಯು ಕಟ್ಟುನಿಟ್ಟಾಗಿದೆ. ಜುಲೈ 25ರ ಒಳಗಾಗಿ ದಾಖಲೆಗಳನ್ನು ಸಲ್ಲಿಸದಿದ್ದಲ್ಲಿ ಮತದಾರ ಪಟ್ಟಿಯಿಂದ ಹೆಸರು ತೆಗೆದುಹಾಕುತ್ತೇವೆ ಎಂಬಂತಿದೆ’ ಎಂದು ಪ್ರತಿಪಾದಿಸಿದರು. 

ಹಿರಿಯ ವಕೀಲ ಗೋಪಾಲ ಶಂಕರನಾರಾಯಣ ಅವರು, ‘ಚುನಾವಣಾ ಆಯೋಗದ ಅಧಿಕಾರಿಗಳು ಆಧಾರ್‌ ಕಾರ್ಡ್‌ ಮತ್ತು ಮತದಾರ ಗುರುತಿನ ಚೀಟಿಯನ್ನು ದಾಖಲೆಯಾಗಿ ಸ್ವೀಕರಿಸುತ್ತಿಲ್ಲ’ ಎಂದು ದೂರಿದರು.

ನಂತರ ನ್ಯಾಯಮೂರ್ತಿ ಧುಲಿಯಾ ಅವರು, ‘ಗುರುವಾರ (ಜುಲೈ 10) ಅರ್ಜಿಗಳನ್ನು ವಿಚಾರಣೆ ನಡೆಸಲಾಗುವುದು. ಚುನಾವಣಾ ದಿನಾಂಕ ಘೋಷಣೆಯಾದ ಕಾರಣ ನಿಗದಿಪಡಿಸಿರುವ ಕಾಲಮಿತಿಗೆ ಯಾವುದೇ ಮಾನ್ಯತೆ ಇಲ್ಲ’ ಎಂದು ಸ್ಪಷ್ಟಪಡಿಸಿದರು.

ಆರ್‌ಜೆಡಿ ಸಂಸದ ಮನೋಜ್‌ ಝಾ, ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಸೇರಿದಂತೆ ಅನೇಕರು ಆಯೋಗದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಜೂನ್‌ 24ರಂದು ಚುನಾವಣಾ ಆಯೋಗ ಹೊರಡಿಸಿರುವ ಆದೇಶವು ಸಂವಿಧಾನದ 14, 21, 325 ಮತ್ತು 326ನೇ ವಿಧಿಗಳನ್ನು ಉಲ್ಲಂಘಿಸುತ್ತದೆ. 1950ರ ಜನ ಪ್ರಾತಿನಿಧ್ಯ ಕಾಯ್ದೆ ಮತ್ತು 1960ರ ಮತದಾರರ ನೋಂದಣಿ ನಿಯಮಗಳ ನಿಯಮ 21ಎ ನಿಬಂಧನೆಯನ್ನೂ ಉಲ್ಲಂಘಿಸುತ್ತದೆ ಎಂದು ಅರ್ಜಿಗಳಲ್ಲಿ ವಾದಿಸಲಾಗಿದೆ.

ಲಕ್ಷಾಂತರ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ ಪ್ರಯತ್ನ ಇದು ಎಂದು ಅಸೋಸಿಯೇಷನ್‌ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್‌) ಆತಂಕ ವ್ಯಕ್ತಪಡಿಸಿದೆ.

ಬಿಹಾರ ವಿಧಾನಸಭೆಗೆ ಈ ವರ್ಷದ ಕೊನೆಯಲ್ಲಿ ಚುನಾವಣೆ ನಡೆಯಲಿದೆ.

 ಮತದಾರ ಪಟ್ಟಿ ವಿಶೇಷ ಪರಿಷ್ಕರಣೆಯನ್ನು ಕೂಡಲೇ ನಿಲ್ಲಿಸಬೇಕು. ಆಧಾರ್‌ ಮತ್ತು ನರೇಗಾ ಕಾರ್ಡ್‌ಗಳನ್ನು ದಾಖಲೆಯಾಗಿ ಸ್ವೀಕರಿಸದ ಕಾರಣ ಜನರಿಗೆ ತೊಂದರೆಯಾಗುತ್ತಿದೆ.
–ತೇಜಸ್ವಿ ಯಾದವ್‌, ಆರ್‌ಜೆಡಿ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.