ADVERTISEMENT

ಗವಾಯಿ ಉತ್ತರಾಧಿಕಾರಿಯಾಗಿ ನ್ಯಾ.ಸೂರ್ಯ ಕಾಂತ್‌: ನ.24ರಂದು ಸಿಜೆಐ ಆಗಿ ಪ್ರಮಾಣ

ಪಿಟಿಐ
Published 23 ನವೆಂಬರ್ 2025, 7:25 IST
Last Updated 23 ನವೆಂಬರ್ 2025, 7:25 IST
   

ನವದೆಹಲಿ: ಸುಪ್ರೀಂ ಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ನ್ಯಾಯಮೂರ್ತಿ ಸೂರ್ಯ ಕಾಂತ್‌ ಅವರು ನಾಳೆ (ಸೋಮವಾರ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ನ್ಯಾಯಮೂರ್ತಿ ಸೂರ್ಯ ಕಾಂತ್‌ ಅವರು, ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು, ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ, ಪೆಗಾಸಸ್ ಸ್ಪೈವೇರ್ ಪ್ರಕರಣ ಸೇರಿದಂತೆ ಹಲವು ಮಹತ್ವದ ತೀರ್ಪುಗಳು ಮತ್ತು ಆದೇಶಗಳ ಭಾಗವಾಗಿದ್ದಾರೆ.

ಇಂದು ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ನಿವೃತ್ತರಾಗಲಿದ್ದಾರೆ. ಅವರ ಉತ್ತರಾಧಿಕಾರಿಯಾಗಿ ಸೂರ್ಯಕಾಂತ್‌ ಅವರನ್ನು ನೇಮಕ ಮಾಡುವಂತೆ ಗವಾಯಿ ಅವರು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದರು. ನ್ಯಾಯಮೂರ್ತಿ ಕಾಂತ್ ಅವರನ್ನು ಮುಂದಿನ ಸಿಜೆಐ ಆಗಿ ಅಕ್ಟೋಬರ್ 30 ರಂದು ನೇಮಕ ಮಾಡಲಾಯಿತು.

ADVERTISEMENT

ಸುಪ್ರೀಂ ಕೋರ್ಟ್‌ನ ನ್ಯಾಯ ಮೂರ್ತಿಯಾಗಿ ನ್ಯಾ. ಸೂರ್ಯಕಾಂತ್‌ ಅವರು 2019ರ ಮೇ 24ರಂದು ಬಡ್ತಿ ಪಡೆದಿದ್ದರು. ಇವರು 2027ರ ಫೆ. 9ರಂದು ನಿವೃತ್ತಿಯಾಗಲಿದ್ದಾರೆ. ಇವರು ಸುಮಾರು 15 ತಿಂಗಳವರೆಗೆ ಸಿಜೆಐ ಆಗಿ ಕಾರ್ಯನಿರ್ವಹಿಸಲಿದ್ದಾರೆ.

ನ್ಯಾಯಮೂರ್ತಿ ಸೂರ್ಯ ಅವರ ಆರಂಭಿಕ ಜೀವನ

ನ್ಯಾಯಮೂರ್ತಿ ಸೂರ್ಯ ಕಾಂತ್‌ ಅವರು ಹರಿಯಾಣದ ಹಿಸ್ಸಾರ್‌ ಜಿಲ್ಲೆಯ ಪೆಟ್ವಾರ್ ಗ್ರಾಮದಲ್ಲಿ 1962ರ ಫೆಬ್ರುವರಿ 10ರಂದು ಜನಿಸಿದರು.

ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದ ಅವರು, ಎಸ್ಸೆಸ್ಸೆಲ್ಸಿವರೆಗೆ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆದಿದ್ದಾರೆ.

‘ನನ್ನ ಶಾಲಾ ಶಿಕ್ಷಣ ಸರ್ಕಾರಿ ಶಾಲೆಯಲ್ಲೇ ಆಗಿತ್ತು. ಶಾಲೆ ಬಿಟ್ಟ ನಂತರ ಬಿಡುವಿನ ಅವಧಿಯಲ್ಲಿ ಗದ್ದೆಗಳಲ್ಲಿ ದುಡಿಯುತ್ತಿದ್ದೆ’ ಎಂದು ಅವರು ಇತ್ತೀಚೆಗೆ ನೆನಪಿಸಿಕೊಂಡಿದ್ದರು. ಕೃಷಿ ಕ್ಷೇತ್ರದಲ್ಲಿ ಗ್ರಾಮಸ್ಥರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರಿಂದ ಜೀವನದ ಬಗ್ಗೆ ಅನೇಕ ಪಾಠಗಳನ್ನು ಕಲಿಯಲು ಸಾಧ್ಯವಾಯಿತು‘ ಎಂದು ಹೇಳಿಕೊಂಡಿದ್ದರು.

ಮಹರ್ಷಿ ದಯಾನಂದ ವಿಶ್ವವಿದ್ಯಾಲಯ ದಲ್ಲಿ ಕೆಲ ಸಮಯದ ಹಿಂದೆ ಉಪನ್ಯಾಸ ನೀಡಿದ್ದ ನ್ಯಾ. ಸೂರ್ಯ ಕಾಂತ್ ಅವರು ಹಳ್ಳಿಯ ಕಷ್ಟದ ಜೀವನದ ಬಗ್ಗೆ ತಿಳಿಸಿದ್ದರು.

‘ಏಳನೇ ತರಗತಿಯವರೆಗೆ ವ್ಯಾಸಂಗ ಮಾಡಿದ್ದ ಹಳ್ಳಿಯ ಶಾಲೆಯಲ್ಲಿ ಸರಿಯಾದ ಬೆಂಚುಗಳೇ ಇರಲಿಲ್ಲ. ಗ್ರಾಮದಲ್ಲಿ ವಿದ್ಯುತ್ ಸೌಲಭ್ಯವೂ ಸಮರ್ಪಕ ಆಗಿರಲಿಲ್ಲ. ಬುಡ್ಡಿ ದೀಪದ ಬೆಳಕಿನಲ್ಲಿ ಗೆಳೆಯರ ಜತೆಗೂಡಿ ಅಧ್ಯಯನ ನಡೆಸುತ್ತಿದ್ದೆ. ಸರ್ಕಾರಿ ಉದ್ಯೋಗ ಪಡೆಯುವುದೇ ನಮ್ಮೆಲ್ಲರ ಗುರಿಯಾಗಿತ್ತು’ ಎಂದು ನೆನಪಿಸಿಕೊಂಡಿದ್ದರು.

ವೃತ್ತಿ ಜೀವನ
  • ಹಿಸ್ಸಾರ್‌ ಜಿಲ್ಲೆಯ ಪೆಟ್ವಾರ್ ಗ್ರಾಮದಲ್ಲಿ 1962ರ ಫೆಬ್ರುವರಿ 10ರಂದು ಜನನ

  • ಮಹರ್ಷಿ ದಯಾನಂದ ವಿಶ್ವವಿದ್ಯಾಲಯದಲ್ಲಿ 1984ರಲ್ಲಿ ಎಲ್‌ಎಲ್‌ಬಿ ಪದವಿ

  • ಆರಂಭದಲ್ಲಿ ಹಿಸ್ಸಾರ್‌ನ ನ್ಯಾಯಾಲಯದಲ್ಲಿ ವಕೀಲಿಕೆ. ಬಳಿಕ ಪಂಜಾಬ್‌ ಹಾಗೂ ಹರಿಯಾಣ ಹೈಕೋರ್ಟ್‌ನಲ್ಲಿ ವಕೀಲ ವೃತ್ತಿ

  • 38ನೇ ವಯಸ್ಸಿನಲ್ಲೇ ಹರಿಯಾಣದ ಅಡ್ವೊಕೇಟ್‌ ಜನರಲ್ ಆಗಿ ಕಾರ್ಯನಿರ್ವಹಣೆ

  • 42ನೇ ವಯಸ್ಸಿನಲ್ಲಿ ಪಂಜಾಬ್‌ ಹಾಗೂ ಹರಿಯಾಣ ಹೈಕೋರ್ಟ್‌ ನ್ಯಾಯಮೂರ್ತಿಯಾಗಿನೇಮಕ. ಅಲ್ಲಿ 14 ವರ್ಷಗಳ ಕಾಲ ಸೇವೆ.

  • 2018ರ ಅಕ್ಟೋಬರ್‌ 5ರಂದು ಹಿಮಾಚಲ ಪ್ರದೇಶ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಪದೋನ್ನತಿ

  • 2019ರ ಮೇ 4ಕ್ಕೆ ‘ಸುಪ್ರೀಂ’ ನ್ಯಾಯಮೂರ್ತಿಯಾಗಿ ಬಡ್ತಿ.

ಪ್ರಮುಖ ತೀರ್ಪುಗಳು

ಹೈಕೋರ್ಟ್‌ ಹಾಗೂ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಸೂರ್ಯ ಕಾಂತ್ ಹಲವು ಮಹತ್ವದ ತೀರ್ಪುಗಳನ್ನು ನೀಡಿದ್ದಾರೆ. ಇವುಗಳಲ್ಲಿ ವಾಕ್‌ ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಭ್ರಷ್ಟಾಚಾರ, ಪರಿಸರ ಹಾಗೂ ಲಿಂಗ ಸಮಾನತೆ ಪ್ರಕರಣಗಳು ಸೇರಿವೆ.

  • ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ್ದ ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದಿದ್ದ ಸುಪ್ರೀಂ ಕೋರ್ಟ್‌ ಪೀಠದ ಭಾಗವಾಗಿದ್ದರು. ವಸಾಹತು ಯುಗದ ದೇಶದ್ರೋಹ ಕಾನೂನಿಗೆ ತಡೆ ನೀಡಿದ್ದ ಪೀಠದಲ್ಲಿದ್ದರು

  • ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್‌ಐಆರ್‌) ಸಮಯದಲ್ಲಿ ಕರಡು ಮತದಾರರ ಪಟ್ಟಿಯಿಂದ ಹೊರಗಿಡಲಾದ 65 ಲಕ್ಷ ಹೆಸರುಗಳ ವಿವರಗಳನ್ನು ಬಹಿರಂಗಪಡಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದ್ದರು

  • ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​ಸೇರಿದಂತೆ ಬಾರ್ ಅಸೋಸಿಯೇಷನ್‌ಗಳಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡ ಬೇಕೆಂದು ನಿರ್ದೇಶಿಸಿದ ಕೀರ್ತಿಯೂ ನ್ಯಾ. ಸೂರ್ಯ ಕಾಂತ್ ಅವರಿಗೆ ಸಲ್ಲುತ್ತದೆ.

  • 1967ರ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ತೀರ್ಪನ್ನು ರದ್ದುಗೊಳಿಸಿದ ಏಳು ನ್ಯಾಯಾಧೀಶರ ಪೀಠದಲ್ಲಿ ನ್ಯಾಯಮೂರ್ತಿ ಸೂರ್ಯ ಕಾಂತ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.