ಲಖನೌ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ದಿನೇ ದಿನೇ ಗೊಂದಲಗಳು ಹೆಚ್ಚಾಗುತ್ತಿವೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಗುರುವಾರ ಆಗ್ರಹಿಸಿದರು.
‘ಮಹಾರಾಷ್ಟ್ರ ಸರ್ಕಾರ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ಬಗ್ಗೆ ಗಂಭೀರವಾಗಿ ತನಿಖೆ ನಡೆಸಬೇಕು. ಈ ಪ್ರಕರಣ ಸಂಬಂಧ ಹೊಸ ಹೊಸ ವಿಷಯಗಳು ಬೆಳಕಿಗೆ ಬರುತ್ತಿವೆ. ಸುಶಾಂತ್ ತಂದೆ ಈ ಬಗ್ಗೆ ಪಟ್ನಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಪ್ರಕರಣವನ್ನು ಮುಂಬೈ ಮತ್ತು ಬಿಹಾರ ಪೊಲೀಸರು ತನಿಖೆ ನಡೆಸುವುದಕ್ಕಿಂತ ಸಿಬಿಐ ತನಿಖೆ ನಡೆಸಿದರೆ ಇನ್ನಷ್ಟು ಒಳ್ಳೆಯದು’ ಎಂದು ಮಾಯಾವತಿ ಅವರು ಟ್ವೀಟ್ ಮಾಡಿದ್ದಾರೆ.
ಜು.25ರಂದುಸುಶಾಂತ್ ತಂದೆ ಅವರು ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಸೇರಿದಂತೆ ಆರು ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
‘ಮಹಾರಾಷ್ಟ್ರ, ಬಿಹಾರದ ಕಾಂಗ್ರೆಸ್ ನಾಯಕರುಸುಶಾಂತ್ ಸಿಂಗ್ ಪ್ರಕರಣಕ್ಕೆ ಸಂಬಂಧಿಸಿ ವಿವಿಧ ನಿಲುವು ತಳೆಯುತ್ತಿದ್ದಾರೆ. ಇದನ್ನು ಕೂಡ ಅವರು ರಾಜಕೀಯ ಕಾರಣಕ್ಕೆ ಬಳಸುತ್ತಿದ್ದಾರೆ. ಹಾಗಾಗಿ ಮಹಾರಾಷ್ಟ್ರ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಅವರು ಟ್ವಿಟರ್ ಮೂಲಕ ಒತ್ತಾಯಿಸಿದ್ದಾರೆ.
ಜೂ.14ರಂದುಮುಂಬೈನ ಬಾಂದ್ರಾ ನಿವಾಸದಲ್ಲಿ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣಾಗಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.