ಕೊಚ್ಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮಾಜಿ ಪ್ರಧಾನ ಕಾರ್ಯದರ್ಶಿ ಎಂ.ಶಿವಶಂಕರ್ ಅವರಿಗೆ ಇಲ್ಲಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಬುಧವಾರ ಜಾಮೀನು ನೀಡಿದೆ.
ಶಿವಶಂಕರ್ ವಿರುದ್ಧದ ಪ್ರಕರಣವು ’ಗಂಭೀರ‘ ಹಾಗೂ ‘ತೀವ್ರ ತನಿಖೆಯ ಅಗತ್ಯವಿದೆ‘ ಎಂದು ನ್ಯಾಯಾಲಯ ಹೇಳಿದೆ.
98 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಶಿವಶಂಕರ್ ಅವರನ್ನು ಬುಧವಾರ ಮಧ್ಯಾಹ್ನ 3 ಗಂಟೆಗೆ ಬಿಡುಗಡೆ ಮಾಡಲಾಯಿತು.
‘ವಿದೇಶಿ ನೋಟುಗಳ ಅಕ್ರಮ ಕಳ್ಳ ಸಾಗಣೆ ಹಾಗೂ ಈ ಪ್ರಕರಣದ ಪ್ರಧಾನ ಆರೋಪಿ ಬಗ್ಗೆ ಶಿವಶಂಕರ್ ಅವರಿಗೆ ಸರಿಯಾದ ಮಾಹಿತಿ ತಿಳಿದಿದ್ದರೂ, ಹಿರಿಯ, ಜವಾಬ್ದಾರಿಯುತ ಅಧಿಕಾರಿಯಾಗಿ ಅದನ್ನು ಅವರು ಸೂಕ್ತ ಪ್ರಾಧಿಕಾರದ ಗಮನಕ್ಕೆ ತರುವಲ್ಲಿ ವಿಫಲರಾಗಿರುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು‘ ಎಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶರು ತಿಳಿಸಿದ್ದಾರೆ.
₹1 ಲಕ್ಷದ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ನೀಡಬೇಕು ಎಂದು ಕೋರ್ಟ್ ನಿರ್ದೇಶಿಸಿದೆ. ಅಗತ್ಯವಿರುವಾಗಲೆಲ್ಲ ತನಿಖೆಗೆ ಹಾಜರಾಗಬೇಕು ಎಂದು ಆದೇಶಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.