ಜೈಪುರ: ಲೋಕಸಭೆ ಹಾಗೂ ರಾಜ್ಯಸಭೆಯಿಂದ ವಿರೋಧ ಪಕ್ಷದ ಸದಸ್ಯರನ್ನು ಅಮಾನತುಗೊಳಿಸಿರುವುದು ಸಂಸತ್ತಿನ ಇತಿಹಾಸದಲ್ಲಿ ದುರದೃಷ್ಟಕರ ಘಟನೆ ಎಂದು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಗೆಹಲೋತ್, ‘ಲೋಕಸಭೆ ಕಲಾಪವನ್ನು ನಡೆಸುವುದು ಸ್ಪೀಕರ್ ಜವಾಬ್ದಾರಿಯಾಗಿದ್ದು, ಸಂಸತ್ತಿನ ಭದ್ರತೆಯಲ್ಲಿ ಲೋಪವೆಸಗಿರುವ ಗಂಭೀರ ವಿಚಾರದ ಕುರಿತು ಸದನದಲ್ಲಿ ಹೇಳಿಕೆ ನೀಡುವಂತೆ ಗೃಹ ಸಚಿವರಿಗೆ ಸ್ಪೀಕರ್ ಸೂಚಿಸಿದ್ದರೆ ಈ ವಿಷಯ ಅಲ್ಲಿಗೆ ಮುಗಿಯುತ್ತಿತ್ತು. ಇಷ್ಟು ಗಲಾಟೆ ಆಗುತ್ತಿರಲಿಲ್ಲ’ ಎಂದು ತಿಳಿಸಿದ್ದಾರೆ.
‘ಸಂಸತ್ ಭದ್ರತಾ ಲೋಪ ಕುರಿತು ಕೇಂದ್ರದಿಂದ ಯಾವುದೇ ಹೇಳಿಕೆ ನೀಡದಿರುವುದು ಮತ್ತು ಈ ವಿಷಯದ ಬಗ್ಗೆ ಚರ್ಚೆ ನಡೆಸುವ ಬದಲು ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿರುವುದು ಸಂಸತ್ತಿನ ಇತಿಹಾಸದಲ್ಲಿ ನಡೆದ ದುರದೃಷ್ಟಕರ ಘಟನೆಯಾಗಿದೆ’ ಎಂದು ಗೆಹಲೋತ್ ಹೇಳಿದ್ದಾರೆ.
ಸಂಸತ್ತಿನಿಂದ ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ನ ರಾಜಸ್ಥಾನ ಘಟಕ ಇಂದು (ಶುಕ್ರವಾರ) ರಾಜ್ಯಾದಾದ್ಯಂತ ಪ್ರತಿಭಟನೆ ನಡೆಸಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.