ನವದೆಹಲಿ: ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಿದ್ದು, ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಯೊಂದರಲ್ಲಿ ಐಸಿಯುಗೆ ದಾಖಲಿಸಲಾಗಿದೆ ಎಂದು ಅವರ ಸ್ನೇಹಿತ ರಾಕೇಶ್ ಚೌರಾಸಿಯಾ ಭಾನುವಾರ ತಿಳಿಸಿದ್ದಾರೆ.
‘73 ವರ್ಷ ಹುಸೇನ್ ಅವರಿಗೆ ರಕ್ತದೊತ್ತಡದ ಸಮಸ್ಯೆ ಇತ್ತು. ಕಳೆದ ಎರಡು ವಾರಗಳಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಅವರ ವ್ಯವಸ್ಥಾಪಕ ನಿರ್ಮಲಾ ಬಚಾನಿ ಹೇಳಿದ್ದಾರೆ.
‘ಅಸ್ವಸ್ಥರಾಗಿರುವ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಪರಿಸ್ಥಿತಿಯ ಬಗ್ಗೆ ನಾವು ಚಿಂತಾಕ್ರಾಂತರಾಗಿದ್ದೇವೆ’ ಎಂದು ಚೌರಾಸಿಯಾ ತಿಳಿಸಿದ್ದಾರೆ.
‘ಪ್ರಸಿದ್ಧ ತಬಲಾ ವಾದಕ, ಉಸ್ತಾದ್ ಅಲ್ಲಾ ರಖಾ ಅವರ ಪುತ್ರ ಉಸ್ತಾದ್ ಜಾಕಿರ್ ಹುಸೇನ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರು ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೊ ಆಸ್ಪತ್ರೆಯಲ್ಲಿ ಗಂಭೀರ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರ ಸಹೋದರ ಅಯೂಬ್ ತಿಳಿಸಿದ್ದಾರೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುವಂತೆ ಲಂಡನ್ ಮೂಲದ ಔಲಿಯಾ ಸಾಹಬ್ ನನ್ನೊಂದಿಗೆ ಫೋನ್ ಕರೆಯಲ್ಲಿ ವಿನಂತಿಸಿದ್ದಾರೆ’ ಎಂದು ಪತ್ರಕರ್ತ ಪರ್ವೈಜ್ ಆಲಂ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
ಪ್ರಸಿದ್ಧ ಸಂಗೀತಗಾರರಲ್ಲಿ ಒಬ್ಬರಾದ ಹುಸೇನ್ ಅವರು 1988 ರಲ್ಲಿ ಪದ್ಮಶ್ರೀ, 2002 ರಲ್ಲಿ ಪದ್ಮಭೂಷಣ ಮತ್ತು 2023 ರಲ್ಲಿ ಪದ್ಮವಿಭೂಷಣ ಗೌರವಕ್ಕೆ ಭಾಜನರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.