ನವದೆಹಲಿ: ಲಾಕ್ಡೌನ್ ಇರುವ ವರೆಗೆ ರಾಜ್ಯದಲ್ಲಿ ಎಲ್ಲ ಮದ್ಯದಂಗಡಿಗಳನ್ನು ಮುಚ್ಚಬೇಕು ಎಂಬ ಮದ್ರಾಸ್ ಹೈಕೋರ್ಟ್ ಆದೇಶವನ್ನು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದೆ.
‘ಮದ್ರಾಸ್ ಹೈಕೋರ್ಟ್ ನಿನ್ನೆ ನೀಡಿರುವ ಆದೇಶ ಪ್ರಶ್ನಿಸಿ ನಾವು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದೇವೆ’ ಎಂದು ಸರ್ಕಾರದ ಪರ ವಕೀಲರೊಬ್ಬರು ಶನಿವಾರ ತಿಳಿಸಿದ್ದಾರೆ.
ಲಾಕ್ಡೌನ್ ನಿರ್ಬಂಧ ಸಂಪೂರ್ಣ ತೆರವು ಮಾಡುವವರೆಗೆ ರಾಜ್ಯದಲ್ಲಿ ಮದ್ಯದ ಅಂಗಡಿಗಳನ್ನು ತೆರೆಯುವಂತಿಲ್ಲ. ಆನ್ಲೈನ್ ಮೂಲಕ ಮಾತ್ರ ಮಾರಾಟ ಮಾಡಬಹುದು ಎಂದು ಮದ್ರಾಸ್ ಹೈಕೋರ್ಟ್ ಶುಕ್ರವಾರ ಆದೇಶಿಸಿತ್ತು.
ಮದ್ಯದ ಅಂಗಡಿಗಳನ್ನು ತೆರೆದ ಬೆನ್ನಲ್ಲೇ, ಗುರುವಾರ ರಾಜ್ಯದಾದ್ಯಂತ ಅಂಗಡಿಗಳ ಎದುರು ಮದ್ಯ ಖರೀದಿಗೆ ಜನರು ಮುಗಿಬೀಳುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಅಂತರ ಕಾಯ್ದುಕೊಳ್ಳದೇ ಜನ ಮದ್ಯ ಖರೀದಿಗೆ ಧಾವಿಸಿದ್ದರು. ಇದರಿಂದ ಲಾಕ್ಡೌನ್ ನಿಯಮಗಳ ಉಲ್ಲಂಘನೆಯಾಗುತ್ತಿದೆ, ಕೊರೊನಾ ಸೋಂಕು ಹರಡುವ ಅಪಾಯ ಹೆಚ್ಚಿದೆ ಎಂದು ಆರೋಪಿಸಿ ಮದ್ರಾಸ್ ಹೈಕೋರ್ಟ್ಗೆ ಅರ್ಜಿಗಳು ಸಲ್ಲಿಕೆಯಾಗಿದ್ದವು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.